ಮೂಡಲಗಿ: ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಹಾಗೂ ಸೌಲಭ್ಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ರಾಜ್ಯಕ್ಕೆ 100.76 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದು, ಅದರಲ್ಲಿ 331 ನ್ಯಾಯಾಲಯದ ಸಭಾಂಗಣಗಳು ಮತ್ತು 119 ವಸತಿ ನಿಲಯಗಳ ನಿರ್ಮಾಣ ಪೂರ್ಣಗೊಂಡಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ಸಚಿವ ಕಿರಣ್ ರಿಜಿಜು ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನ್ಯಾಯಾಲಯಗಳ ಮೂಲಸೌಕರ್ಯಗಳ ಅಭಿವೃದ್ದಿಗಾಗಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು 2021-22 ರಿಂದ 2025-26 ರವರೆಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ನ್ಯಾಯಾಲಯದ ಸಭಾಂಗಣಗಳು ಮತ್ತು ವಸತಿ ನಿಲಯಗಳ ನಿರ್ಮಾಣದ ಜೊತೆಗೆ, ಡಿಜಿಟಲ್ ಕಂಪ್ಯೂಟರ್ ಕೊಠಡಿಗಳು, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಶೌಚಾಲಯಗಳ ನಿರ್ಮಾಣವನ್ನೂ ಒಳಗೊಂಡಿದೆ. ಈ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 9,013 ಕೋಟಿ ರೂ. ಬಿಡುಗಡೆ ಮಾಡಲಾಗಿದು,್ದ ದೇಶಾದ್ಯಂತ ಇಲ್ಲಿಯವರೆಗೆ 2677 ನ್ಯಾಯಾಲಯದ ಸಭಾಂಗಣಗಳು ಮತ್ತು 1659 ವಸತಿ ನಿಲಯಗಳ ನಿರ್ಮಾಣ ಹಂತದಲ್ಲಿವೆ, 30.06.2022 ರವರೆಗೆ 431 ನ್ಯಾಯಾಲಯದ ಸಭಾಂಗಣಗಳು ಮತ್ತು 541 ವಸತಿ ನಿಲಯಗಳ ನಿರ್ಮಾಣಗಳನ್ನು ನಿರ್ಮಿಸಲು ಪ್ರಸ್ತಾಪಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದರು ಮಾಹಿತಿ ಹಂಚಿಕೊಂಡರು.