ಸವದತ್ತಿ: ಸ್ಥಳೀಯ ಶಾಸಕರ ಕಚೇರಿಯಲ್ಲಿ ಗುರುವಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಅನುದಾನರಹಿತ ಶಾಲೆಗಳ ಕ್ಷೇಮಾಭಿವೃದ್ಧಿ ಸಂಘದಿಂದ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೊಳಪಡಿಸುವಂತೆ ಒತ್ತಾಯಿಸಿ ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿಯವರಿಗೆ ಮನವಿ ಸಲ್ಲಿಸಲಾಯಿತು.
ಕಳೆದ 20 ವರ್ಷಗಳಿಂದ ಯಾವುದೇ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳು ಸರಕಾರಿ ಅನುದಾನಕ್ಕೆ ಒಳಪಟ್ಟಿಲ್ಲ. ಬಡ ಹಾಗೂ ನಿರ್ಗತಿಕ ಕುಟುಂಬಗಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿರುವ ಖಾಸಗಿ ಸಂಸ್ಥೆಗಳು ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಆದರೆ 2008 ರಿಂದ ಬಂದಂತಹ ಎಲ್ಲ ಸರಕಾರಗಳು ಈ ಕುರಿತು ಗಮನ ಹರಿಸಿಲ್ಲ. ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿತ್ತು.ಈ ಹಿಂದೆ ಶಿಕ್ಷಣ ಸಚಿವರಾಗಿದ್ದ ಸುರೇಶಕುಮಾರ ಸಹ ಹಲವಾರು ಸಭೆಗಳನ್ನು ಮಾಡಿ ಈ ಕುರಿತು ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಸಿ ಅನುದಾನಕ್ಕೆ ಒಳಪಡಿಸುವ ಇಂಗಿತ ವ್ಯಕ್ತಪಡಿಸಿದ್ದರು.
ಆದ್ದರಿಂದ ವಿಧಾನಸಭೆಯ ಉನ್ನತ ಹುದ್ದೆಯಲ್ಲಿರುವ ಆನಂದ ಮಾಮನಿ ಅವರು, 1995 ರ ನಂತರದ ಅನುದಾನರಹಿತ ಕನ್ನಡ ಮಾಧ್ಯಮದ ಖಾಸಗಿ ಶಾಲೆಗಳ ಕುರಿತು ಸರಕಾರದ ಮಟ್ಟದಲ್ಲಿ ಒತ್ತಡ ತಂದು ಕನ್ನಡ ಶಾಲೆ ಹಾಗೂ ಕನ್ನಡ ಭಾಷೆಯ ಉಳಿವಿಗೆ ಪ್ರಾಶಸ್ತ್ಯ ನೀಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ವೇಳೆ ಸಂಘದ ಅಧ್ಯಕ್ಷ ಜಗದೀಶ ತೋಟಗಿ, ನಾರಾಯಣ ಕಲಾಲ, ಡಿ.ಎಸ್.ಕೊಪ್ಪದ, ಆನಂದ ಹಿರೆಹೊಳಿ, ಸೋಮೇಶ ಕಂಕನವಾಡಿ, ಮಂಜುನಾಥ ಕಾತರಕಿ, ಬಸವರಾಜ ತಳವಾರ ಸೇರಿದಂತೆ ಇತರರು ಇದ್ದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಮನವಿ ಸ್ವಿಕರಿಸಿದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಈ ಕುರಿತು ಧನಾತ್ಮಕವಾಗಿ ಪ್ರತಿಕ್ರಿಯಿಸಿ, ಕಳೆದ 2 ದಶಕಗಳಿಂದ ಕನ್ನಡ ಮಾಧ್ಯಮ ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಂತಿಯುತ ಹೋರಾಟ ಹಾಗೂ ಕೋವಿಡ್ ಸಂದರ್ಭದಲ್ಲಿ ಅನುಭವಿಸಿದ ಆರ್ಥಿಕ ಸಂಕಷ್ಟಗಳ ಕುರಿತು ಮುಖ್ಯಮಂತ್ರಿ ಸೇರಿದಂತೆ ಸಂಬಂಧಿಸಿದ ಸಚಿವರ ಗಮನಕ್ಕೆ ತಂದು ಕನ್ನಡ ಮಾಧ್ಯಮ ಶಾಲೆಗಳ ಹಾಗೂ ಕನ್ನಡ ಭಾಷೆಯ ಉಳಿವಿಗೆ ಶ್ರಮಿಸುತ್ತೇನೆಂದು ಆಶ್ವಾಸನೆ ನೀಡಿದರು.