ವಿದ್ಯಾರ್ಥಿಗಳು ಶಿಸ್ತು, ಸಂಯಮ, ನೈತಿಕ ಮೌಲ್ಯ ಅಳವಡಿಸಿಕೊಂಡು ವ್ಯಾಸಂಗ ಮಾಡಬೇಕು – ಪ್ರೊ. ಹೆಬ್ಬಾಳ

Must Read

ಮೂಡಲಗಿ : ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಗುರಿ ಸಾಧನೆ ಮಾಡಬೇಕು ಎಂದು ಉಪನ್ಯಾಸಕ ಪ್ರೊ. ಬಸಪ್ಪ ಹೆಬ್ಬಾಳ ಹೇಳಿದರು.

ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ವೈಯಕ್ತಿಕ ಬೆಳವಣಿಗೆ ಮಾತ್ರವಲ್ಲದೆ ಸಮಾಜ ಮತ್ತು ದೇಶದ ಪ್ರಗತಿ ಬಗ್ಗೆಯೂ ವಿದ್ಯಾರ್ಥಿ, ಯುವಜನರಿಗೆ ಜವಾಬ್ದಾರಿ ಇರಬೇಕು. ಓದುವ ಸಮಯದಲ್ಲಿ ಕಾಲಹರಣ ಮಾಡಿದರೆ ಕಷ್ಟ, ನೋವು ಕಟ್ಟಿಟ್ಟ ಬುತ್ತಿ ಎಂಬುದನ್ನು ಮರೆಯಬಾರದು. ನೈತಿಕ ಮಾರ್ಗದಲ್ಲಿ ನಡೆದು ಗುರಿ ಸಾಧನೆ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಜನ್ಮ ನೀಡಿ ಸಾಕಿ ಸಲುಹಿದ ತಂದೆ ತಾಯಿಗಳು, ಪೋಷಕರು ಹಾಗೂ ವಿದ್ಯೆ ನೀಡಿ ಬೆಳವಣಿಗೆಗೆ ಕಾರಣರಾದ ಗುರುಗಳನ್ನು ಎಂದಿಗೂ ಮರೆಯಬಾರದು. ಅವರಿಗೆ ಎಂದೆಂದೂ ಚಿರಋಣಿಗಳಾಗಿರಬೇಕು. ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್, ಫೇಸ್‍ಬುಕ್ ಗುಂಗಿನಲ್ಲಿ ಮುಳುಗಿ ಸಮಯ ಪೋಲು ಮಾಡುವುದು ಸಲ್ಲದು. ಶ್ರಮಪಟ್ಟು ಓದುವವರು ಭವಿಷ್ಯದಲ್ಲಿ ಸುಖವಾಗಿ ಬದುಕು ಕಟ್ಟಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಮಾತನಾಡಿ, ಸಮಾಜದಲ್ಲಿ ವಿದ್ಯಾವಂಚಿತರಿಗೆ ಮಹತ್ವದ ಸ್ಥಾನವಿದೆ. ವಿದ್ಯಾರ್ಥಿಗಳು ತುಡಿತ ಸದಾ ಜ್ಞಾನಾರ್ಜನೆಯ ಕಡೆಗೇ ಇರಬೇಕು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆ ಕಡೆಗೆ ಗಮನ ಹರಿಸಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿತ್ವದೆಡೆಗೆ ಸಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕ್ರೀಡೆ ಹಾಗೂ ಸಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಎಮ್ ಎಚ್ ಸೋನವಾಲ್ಕರ, ಪ್ರಾಚಾರ್ಯ ಎಸ್ ಡಿ ತಳವಾರ, ಎಂ ಎಸ್ ಪಾಟೀಲ, ಬಿ ಜಿ ಗಡಾದ, ಡಾ. ರೇಖಾ ಬಿರಾದರ, ಎಸ್ ಬಿ ಚಂದರಗಿ, ಎಸ್ ಕೆ ಹಿರೇಮಠ, ಎನ್ ಪಿ ಗುಳೆದಗುಡ್ಡ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group