ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ

Must Read

ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಇಲ್ಲಿನ ಗಾಂಧಿ ಕೃಷಿ ವಿಶ್ವ ವಿದ್ಯಾಲಯ(ಜಿಕೆವ್ಹಿಕೆ)ದಲ್ಲಿ ಶನಿವಾರದಂದು ಜರುಗಿದ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಈಗಿನ ಸಂದಿಗ್ಧ ಸ್ಥಿತಿಯಲ್ಲಿ ಸರ್ಕಾರ ನೀಡುತ್ತಿರುವ 5 ರೂ. ಪ್ರೋತ್ಸಾಹ ಧನ ಮಾತ್ರವೇ ರೈತರಿಗೆ ಉಳಿಯುತ್ತಿದೆ ಎಂದು ಅವರು ತಿಳಿಸಿದರು.

ರೈತರಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿರುವುದರಿಂದ ವಾರ್ಷಿಕವಾಗಿ 1200 ಕೋಟಿ ರೂ. ವೆಚ್ಚವಾಗುತ್ತಿದೆ. ಇನ್ನೂ 2 ರಿಂದ 5 ರೂ.ಗಳ ವರೆಗೆ ಪ್ರೋತ್ಸಾಹಧನವನ್ನು ಸರ್ಕಾರ ಹೆಚ್ಚಳ ಮಾಡಬೇಕು. ಇದರಿಂದ ಸಂಕಷ್ಟದಲ್ಲಿರುವ ಹೈನುಗಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ವಾರ್ಷಿಕವಾಗಿ ಈಗ ತಗಲುತ್ತಿರುವ 1200 ಕೋಟಿ ರೂ.ಗಳಿಂದ ಸುಮಾರು 2000 ಕೋಟಿ ರೂ.ಗಳವರೆಗೆ ಹೆಚ್ಚಳ ಮಾಡಿ ರೈತರಿಗೆ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದರು.

ಡಾ.ವರ್ಗಿಸ್ ಕುರಿಯನ್ ಅವರ ಜನ್ಮ ದಿನಾಚರಣೆ ನಿಮಿತ್ಯ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಆಚರಿಸಲಿಕ್ಕೆ ಅನುಮತಿ ನೀಡಿರುವ ಕೇಂದ್ರ ಸರ್ಕಾರವನ್ನು ಅಭಿನಂದಿಸಿದರು. ದೇಶದಲ್ಲಿ ಹೈನುಗಾರಿಕೆಯನ್ನು ಬೆಳೆಸಿ ಕ್ಷೀರ ಕ್ರಾಂತಿ ಮಾಡಿದ ಕುರಿಯನ್ ಅವರ ಕಾರ್ಯಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಅವರು, ಡಾ.ಕುರಿಯನ್ ಅವರ ಕಾರ್ಯವನ್ನು ಕರ್ನಾಟಕದಲ್ಲಿ ಕೃಷ್ಣಪ್ಪನವರು ಮಾಡಿದ್ದರು. ಡಾ.ಕುರಿಯನ್ ಅವರು ಗುಜರಾತದಲ್ಲಿ ಅಮೂಲ್ ಸ್ಥಾಪಿಸಿ ಹಾಲು ಉದ್ಯಮಕ್ಕೆ ಇಡೀ ದೇಶದಲ್ಲಿಯೇ ಮುನ್ನುಡಿ ಬರೆದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಕಾರ್ಯವನ್ನು ಗುರುತಿಸಿ 1965 ರಲ್ಲಿ ಪ್ರಧಾನಿಯಾಗಿದ್ದ ಲಾಲ್ ಬಹಾದ್ದೂರ ಶಾಸ್ತ್ರಿ ಅವರು ರಾಷ್ಟ್ರೀಯ ಡೇರಿ ಅಭಿಯಾನ ಮಂಡಳಿ ಸ್ಥಾಪಕ ಅಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಿದ್ದರು. ಅದಕ್ಕಾಗಿ ಡಾ. ಕುರಿಯನ್ ಅವರನ್ನು ಭಾರತದ ಕ್ಷೀರ ಕ್ರಾಂತಿಯ ಪಿತಾಮಹ ಎಂದು ಕರೆಯಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ 1 ಲೀಟರ್ ಗುಡ್‍ಲೈಫ್ ಟೋನ್ಡ್ ಮಿಲ್ಕ್ ಬಾಟಲ್‍ನ್ನು ಸಚಿವರು ಬಿಡುಗಡೆಗೊಳಿಸಿದರು.

ಕೇಂದ್ರ ಪಶುಪಾಲನಾ ಖಾತೆಯ ರಾಜ್ಯ ಸಚಿವ ಸಂಜೀವಕುಮಾರ ಬಾಲ್ಯನ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ, ಕೇಂದ್ರ ಪಶುಪಾಲನಾ ಇಲಾಖೆಯ ಕಾರ್ಯದರ್ಶಿ ರಾಕೇಶ್ ಕುಮಾರ ಸಿಂಗ್, ಕೇಂದ್ರ ಸರ್ಕಾರದ ಪಶುಪಾಲನಾ ಇಲಾಖೆಯ ಅಪರ ಕಾರ್ಯದರ್ಶಿ ವರ್ಷಾ ಜೋಶಿ, ರಾಜ್ಯ ಸರ್ಕಾರದ ಪಶು ಸಂಗೋಪನಾ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಯಿಂ, ಪಶು ಸಂಗೋಪನಾ ಇಲಾಖೆ ಆಯುಕ್ತೆ ಅಶ್ವತ್ಥಿ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಆಡಳಿತ ಮಂಡಳಿ ನಿರ್ದೇಶಕರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group