Homeಸುದ್ದಿಗಳುಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ - ಸರ್ವೋತ್ತಮ

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ – ಸರ್ವೋತ್ತಮ

ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಹಾಗೂ ರೈತಪರ ಕೆಲಸಗಳನ್ನು ಮನಗಂಡು ಬಿಜೆಪಿಗೆ ಮತ ನೀಡಿ ಅವರನ್ನು ಆಯ್ಕೆ ಮಾಡುವಂತೆ ಕೋರಿದರು.

ರಾಜ್ಯದಲ್ಲಿಯೇ ಅರಭಾವಿ ಮತಕ್ಷೇತ್ರವನ್ನು ಇತರರು ನೋಡುವಂತೆ ಈ ಬಾರಿ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು. ಕಾರ್ಯಕರ್ತರು ತಮ್ಮಲ್ಲಿನ ಸ್ಥಾನಿಕ ಕೆಲ ಮನಸ್ತಾಪಗಳನ್ನು ಮರೆತು ಮೇ೧೦ ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೆಚ್ಚಿನ ಪ್ರಮಾಣದಲ್ಲಿ ಮುನ್ನಡೆ ನೀಡಬೇಕು. ಕನಿಷ್ಠ ೧ ಲಕ್ಷಕ್ಕೂ ಅಧಿಕ ಮತಗಳ ಲೀಡ್ ನೀಡಿ ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಜಾತ್ಯತೀತವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆಧುನಿಕ ಬಸವಣ್ಣನವರಂತೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಷ್ಟದಲ್ಲಿರುವ ಕುಟುಂಬಗಳಿಗೆ ಆಸರೆಯಾಗಿ ನಿಂತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಟ್ಟು ಮತದಾರ ಬಂಧುಗಳು ಬಿಜೆಪಿಗೆ ಆಶೀರ್ವಾದ ಮಾಡಲು ಕಾರ್ಯಕರ್ತರು ಮನೆ ಬಾಗಿಲಿಗೆ ತೆರಳಿ ಮನವೊಲಿಸುವ ಕೆಲಸವನ್ನು ಮಾಡುವಂತೆ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.

ಅಧ್ಯಕ್ಷತೆಯನ್ನು ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಅರಭಾವಿ ಮಂಡಲ ವಿಸ್ತಾರಕ ವೆಂಕಟೇಶ ಲಾಳೆ, ಅರಭಾವಿ ಮಂಡಲ ಪ್ರಧಾನ ಕಾರ್ಯದರ್ಶಿ ಪರಸಪ್ಪ ಬಬಲಿ, ಜಿಲ್ಲಾ ಮತ್ತು ಮಂಡಲ ಪ್ರಮುಖ ಪದಾಧಿಕಾರಿಗಳು, ಗ್ರಾಪಂ ಸದಸ್ಯರು, ಆಯಾ ಜಿಪಂ ವ್ಯಾಪ್ತಿಯ ಹಲವಾರು ಪ್ರಮುಖರು, ಬಾಲಚಂದ್ರ ಜಾರಕಿಹೊಳಿಯವರ ಹಿತೈಷಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

RELATED ARTICLES

Most Popular

error: Content is protected !!
Join WhatsApp Group