ಮೂಡಲಗಿ: ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಜಾನುವಾರು ಮಿಷನ್ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದಡಿ ಬೆಳಗಾವಿ ಜಿಲ್ಲೆಯಲ್ಲಿ ಕುರಿ ಫಾರ್ಮ್ ಸ್ಥಾಪನೆಗೆ ಒಟ್ಟು 19.223 ಕೋಟಿ ರೂಪಾಯಿ 33 ಯೋಜನೆಗಳನ್ನು ಅನುಮೋದಿಸಲಾಗಿದೆ ಮತ್ತು ಇದಕ್ಕೆ 9.093 ಕೋಟಿ ರೂಪಾಯಿ ಸಹಾಯಧನ (ಸಬ್ಸಿಡಿ) ಮಂಜೂರಾಗಿದೆ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ (ಬೆಮುಲ್)ಗೆ ಕೇಂದ್ರೀಯ ನೆರವು ಏನು ನೀಡಲಾಗಿದೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಬೆಳಗಾವಿ ಜಿಲ್ಲೆಯ ಕುರಿ ಮತ್ತು ಮೇಕೆಗಳ ಸಾಕಾಣಿಕೆ ಸಮುದಾಯಗಳನ್ನು ಬೆಂಬಲಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಜಾನುವಾರು ಕ್ಷೇತ್ರದಲ್ಲಿ ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸಲು, ತಳಿ ಗುಣಮಟ್ಟವನ್ನು ಸುಧಾರಿಸುವುದು ಮತ್ತು ಉದ್ಯಮಶೀಲತೆಯನ್ನು ಬೆಳೆಸುವ ಗುರಿಯೊಂದಿಗೆ ಕೇಂದ್ರ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯಿಂದ ಕುರಿ ಮತ್ತು ಮೇಕೆಗಳ ತಳಿ ಅಭಿವೃದ್ದಿಗಾಗಿ ಫಾರ್ಮ್ ಸ್ಥಾಪನೆಗೆ ರೂ 50 ಲಕ್ಷದವರೆಗೆ ಯೋಜನೆಗೆ 50% ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
ರಾಷ್ಟ್ರೀಯ ಡೈರಿ ಅಭಿವೃದ್ಧಿ ಕಾರ್ಯಕ್ರಮದಡಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (ಕೆಎಂಎಫ್)ಗೆ 236.60 ಕೋಟಿ ರೂಪಾಯಿ ಕೇಂದ್ರ ಸಹಾಯವನ್ನು ಬಿಡುಗಡೆ ಮಾಡಲಾಗಿದೆ, ಇದರಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ (ಬೆಮುಲ್) ಗೆ ರೂ.3.72 ಕೋಟಿ ಸೇರಿದೆ, ಇದು ಹಾಲು ಸಂಸ್ಕರಣೆ ಮತ್ತು ಶೀತಲೀಕರಣ ಘಟಕಗಳನ್ನು ಆಧುನೀಕರಿಸಲು, ಮೌಲ್ಯವರ್ಧಿತ ಉತ್ಪನ್ನಗಳಿಗೆ ಮೂಲಸೌಕರ್ಯವನ್ನು ರಚಿಸಲು ಮತ್ತು ಹಾಲು ಖರೀದಿ ವ್ಯವಸ್ಥೆಗಳನ್ನು ಸುಧಾರಿಸಲು, ಪ್ರಯೋಗಾಲಯಗಳು, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಮತ್ತು ತರಬೇತಿಗಾಗಿ ನೀಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

