ಸಿಂದಗಿ: ಡಾ. ಬಿ.ಆರ್.ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಇವರನ್ನು ವೃತ್ತಿಯಿಂದ ವಜಾ ಮಾಡುವಂತೆ ಆಗ್ರಹಿಸಿ ದಲಿತ ಸೇನೆ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರ ಮುಖಾಂತರ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಮ್.ಎ. ಸಿಂದಗಿಕರ ಮಾತನಾಡಿ, ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಭಾವಚಿತ್ರ ಇರಿಸಲಾಗಿತ್ತು. ಆಯೋಜಕರು ಜಿಲ್ಲಾ ನ್ಯಾಯಾಧೀಶರನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲು ಆಹ್ಮಾನಿಸಿದಾಗ ಮೊದಲು ಅಂಬೇಡ್ಕರ ಭಾವಚಿತ್ರವನ್ನು ಅಲ್ಲಿಂದ ತೆಗೆದು ಹಾಕಿ ಏಕೆಂದರೆ ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರ ಇಡಲು ಉಚ್ಛ ನ್ಯಾಯಾಲಯದ ನ್ಯಾಯಾಧೀಶರಿಂದ ಯಾವುದೇ ಆದೇಶ ಬಂದಿರುವದಿಲ್ಲ. ಡಾ. ಬಾಬಾಸಾಹೇಬ ಅಂಬೇಡ್ಕರ ಫೋಟೊ ಇದ್ದರೆ ನಾನು ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿ ಅಂಬೇಡ್ಕರರಿಗೆ ಅಗೌರವ ತೋರಿದ್ದಾರೆ. ಆದ್ದರಿಂದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಬಾಬಾ ಸಾಹೇಬ ಅಂಬೇಡ್ಕರ ಅವರನ್ನು ಅವಮಾನ ಮಾಡಿರುವ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಇವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆಕಾಯ್ದೆ 1989 ರ ಎಸ್.ಸಿ/ಎಸ್.ಟಿ 1989 ಕಲಂ(ಎಫ್) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿ ಅವರನ್ನು ಸೇವಾವೃತ್ತಿಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಬಾಲಕೃಷ್ಣ ಚಲವಾದಿ, ರವಿ ದೊಡಮನಿ, ಶ್ರೀನಾಥ ಹೊಸಮನಿ, ರಾಕೇಶ ಕಾಂಬಳೆ, ರಜತ ತಾಂಬೆ, ದತ್ತು ನಾಲ್ಕಮನ, ಅರ್ಜುನ ಭಾವನೂರ, ರವಿ ಹೊಸಮನಿ, ಅಮೀತ ಕೊಕಟನೂರ, ಸಲೀಂ ಇನಾಮದಾರ, ಶರಣಮ್ಮ ರಾಠೋಡ, ಸಂಜೀವ ಕೂಟನೂರ ಸೇರಿದಂತೆ ಅನೇಕರಿದ್ದರು.