ಮೂಡಲಗಿ: ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರು ಮತ್ತು ಹಿಂದುಳಿದ ವರ್ಗಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಸಾಲದ ಬಡ್ಡಿ ಮನ್ನಾ ಮಾಡುವ ಮೂಲಕ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
2013-14 ರಿಂದ 2018-19ರ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು 981 ಕೋಟಿ ರೂಪಾಯಿ ಸಾಲದ ಪೈಕಿ 714 ಕೋಟಿ ರೂಪಾಯಿ ಬಾಕಿ ವಸೂಲಾತಿಗಾಗಿ ‘ಒಂದು ಬಾರಿ ಇತ್ಯರ್ಥ’ (ಓಟಿಎಸ) ಯೋಜನೆ ತರಲಾಗಿದೆ. ಇದು ಕೇವಲ ಒಂದು ಸಮುದಾಯವನ್ನು ಓಲೈಸುವ ಹಿತಾಸಕ್ತಿಯೇ ಹೊರತು ಸಾಮಾಜಿಕ ನ್ಯಾಯವಲ್ಲ. ಸರ್ಕಾರದ ಈ ಧೋರಣೆ ‘ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ’ ಮಾಡುವ ನೀತಿ ಎಂದಿದ್ದಾರೆ
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಸಾಲ ತೆಗೆದುಕೊಂಡಿದ್ದಾರೆ ಇದೇ ರೀತಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ., ಕರ್ನಾಟಕ ಲಂಬಾಣಿ ಅಭಿವೃದ್ಧಿ ನಿಗಮ. ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹೀಗೆ ಎಲ್ಲಾ ಸಮುದಾಯಗಳು ಹಿಂದುಳಿದಿವೆ ಎಂದು ಆ ನಿಗಮಕ್ಕೆ ಸಾಲವನ್ನು ಕೊಟ್ಟಿದ್ದಾರೆ ಆದರೆ ಅವರದು ಸಾಲಮನ್ನಾ ಮಾಡಲಿಲ್ಲ ನೀವು ಒಂದೇ ಸಮುದಾಯಕ್ಕೆ ಮನ್ನಾ ಮಾಡುವುದು ಉದ್ದೇಶ ಪೂರ್ವಕವಾಗಿ ಓಟ್ ಬ್ಯಾಂಕ್ ರಾಜಕಾರಣ ಮಾಡುವ ಸಲುವಾಗಿ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಸಚಿವರ ವಿರುದ್ಧ ಗುಡುಗಿದ ಅವರು, “ಈ ಸಮುದಾಯದ ಸಚಿವರು ಮತ್ತು ಶಾಸಕರು ಕೇವಲ ಮಂತ್ರಿ ಸ್ಥಾನಕ್ಕಾಗಿ ಅಥವಾ ಮುಖ್ಯಮಂತ್ರಿಯಾಗಲು ಹೋರಾಟ ಮಾಡುತ್ತಾರೆಯೇ ಹೊರತು, ತಮ್ಮ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸುವ ತಾಕತ್ತು ತೋರುತ್ತಿಲ್ಲ. ಇದು ಸಮುದಾಯಕ್ಕೆ ಮಾಡುತ್ತಿರುವ ಘೋರ ದ್ರೋಹ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮೃತ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಹಣವಿಲ್ಲ ಎನ್ನುವ ಸರ್ಕಾರಕ್ಕೆ ಒಂದು ಸಮುದಾಯದ ಸಾಲ ಮನ್ನಾ ಮಾಡಲು ಎಲ್ಲಿಂದ ಹಣ ಬರುತ್ತದೆ? ಎಂದು ಪ್ರಶ್ನಿಸಿದ ಅವರು, ತಕ್ಷಣವೇ ರಾಜ್ಯದ ಎಲ್ಲಾ ರೈತರ ಸಾಲದ ಬಡ್ಡಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

