ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವಿರಲಿ: ಕನ್ನಡಮ್ಮನ ಸೇವೆ ಪರಮ ಪವಿತ್ರವಾದದ್ದು – ಪ್ರಭುನೀಲಕಂಠ ಮಹಾಸ್ವಾಮಿಗಳು

Must Read

ಬೈಲಹೊಂಗಲ: ಕನ್ನಡ ನಾಡು-ನುಡಿಯ ಬಗ್ಗೆ ಕನ್ನಡಿಗರಿಗೆ ಅಭಿಮಾನವಿರಬೇಕು, ಕನ್ನಡಮ್ಮನ ಸೇವೆ ಪರಮ ಪವಿತ್ರವಾದದ್ದು ಎಂದು ಬೈಲಹೊಂಗಲದ ಶಾಖಾ ಮೂರುಸಾವಿರ ಮಠದ ಪರಮ ಪೂಜ್ಯ ಶ್ರೀ ಮ.ನಿ.ಪ್ರ.ಸ್ವ ಪ್ರಭುನೀಲಕಂಠ ಮಹಾಸ್ವಾಮಿಗಳು ಹೇಳಿದರು. ನಗರದ ಶ್ರೀ ಶಿವಬಸವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ೨೦೨೧ ರಿಂದ ೨೦೨೬ರ ಅವಧಿಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಕಾರ್ಯಕಾರಿ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾಗಿದ್ದು ಅದನ್ನು ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಕನ್ನಡಕ್ಕೆ ಏನಾದರೂ ಕುತ್ತು ಬಂದಾಗ ಎಲ್ಲ ಕನ್ನಡಿಗರು ಒಂದಾಗಿ ಹೋರಾಡುವ ಮನಸ್ಸು ಮಾಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಚಲನಚಿತ್ರ ನಟ-ನಿರ್ಮಾಪಕರಾದ ಶಿವರಂಜನ ಬೋಳಣ್ಣವರ ಮಾತನಾಡಿ ಆದಷ್ಟು ಬೇಗ ತಾಲ್ಲೂಕು ಕನ್ನಡ ಭವನ ನಿರ್ಮಿಸಲು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಹೇಳಿದರು. ಪ್ರತಿಷ್ಠಿತ ಜಿ.ನಾರಾಯಣಸ್ವಾಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಹೋಟಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹೊಸ ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡದ ಕಲರವವನ್ನು ಎಲ್ಲೆಡೆ ಮೊಳಗಿಸಬೇಕು ಎಂದರು.

ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಾಂತೇಶ ತುರಮರಿ ಮಾತನಾಡಿ ಆಂಗ್ಲ ಭಾಷೆಯ ವ್ಯಾಮೋಹ ತೊರೆದು ಮನೆಗಳಲ್ಲಿ ಪಾಲಕರು ಕನ್ನಡವನ್ನು ಮಕ್ಕಳಿಗೆ ಕಲಿಸುವ ಮತ್ತು ಭಾಷಾಭಿಮಾನ ಮೂಡಿಸುವ ಕೆಲಸ ಮಾಡಬೇಕು ಎಂದರು ಅಭಿಪ್ರಾಯಪಟ್ಟರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್.ಪ್ಯಾಟಿ ಮಾತನಾಡಿ ಕನ್ನಡ ಭಾಷೆಯ ಉಳಿವಿಗಾಗಿ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ಕಳಿಸುವ ಮನೋಭಾವ ಪಾಲಕರಲ್ಲಿ ಬೆಳೆಯಬೇಕು ಎಂದು ಹೇಳಿದರು.

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಹಿತ್ಯ ಸಮ್ಮೇಳನಗಳಲ್ಲಿ ಜನಸಾಮಾನ್ಯರನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದರು. ಕಸಾಪದ ತಾಲ್ಲೂಕು ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಪ್ರಸ್ತಾವಿಕವಾಗಿ ಮಾತನಾಡಿ ಪರಿಷತ್ತಿನ ಕ್ರಿಯಾಯೋಜನೆಯನ್ನು ಮಂಡಿಸಿದರು. ತಿಂಗಳಿಗೆ ಒಂದು ಸಾಹಿತ್ಯಿಕ ಕಾರ್ಯಕ್ರಮಗಳ ಆಯೋಜನೆ ಮಾಡುವುದರ ಮೂಲಕ ಸಾಹಿತ್ಯ ಪರಿಷತ್ತನ್ನು ಸದಾ ಕ್ರಿಯಾಶೀಲವಾಗಿಸುವುದು. ನಿರಂತರವಾದ ವಿನೂತನ ಚಟುವಟಿಕೆಗಳನ್ನು ಹಮ್ಮಿಕೊಂಡು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಜನಮನಕ್ಕೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಕೋಶಾಧ್ಯಕರಾದ ಎಸ್.ಡಿ ಗಂಗಣ್ಣವರ, ತಾಲ್ಲೂಕಾ ಘಟಕದ ಮಾಜಿ ಅಧ್ಯಕ್ಷರಾದ ಬಸವರಾಜ ತಲ್ಲೂರ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಎಂ.ವೈ.ಮೆಣಸಿನಕಾಯಿ, ಬೆಳಗಾವಿ ತಾಲ್ಲೂಕು ಕಸಾಪ ಅಧ್ಯಕ್ಷರಾದ ಸುರೇಶ ಹಂಜಿ, ತಾಲ್ಲೂಕು ಕಸಾಪದ ನಿಕಟಪೂರ್ವ ಅಧ್ಯಕ್ಷರಾದ ಗೌರಾದೇವಿ ತಾಳಿಕೋಟಿಮಠ, ಹಿರಿಯರಾದ ಬಸಪ್ರಭು ಬೆಳಗಾವಿ, ತಾಲ್ಲೂಕು ಕಸಾಪದ ಗೌರವ ಕಾರ್ಯದರ್ಶಿಗಳಾದ ಮಂಜುಳಾ ಶೆಟ್ಟರ, ಕೋಶಾಧ್ಯಕ್ಷರಾದ ಮಹೇಶ ಕೋಟಗಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಗಿರಿಮಲ್ಲಪ್ಪ ಬೆಳವಡಿ, ಭೀಮಪ್ಪ ಕಸಾಳೆ, ಪ್ರೇಮಾ ಅಂಗಡಿ, ಶಶಿಕಲಾ ಯಲಿಗಾರ, ಅನಿಲಕುಮಾರ ರಾಜಣ್ಣವರ, ಶ್ರೀಕಾಂತ ಉಳ್ಳೇಗಡ್ಡಿ, ಸಂತೋಷ ಹಡಪದ, ಲಕ್ಷ್ಮೀ ಮುಗಡ್ಲಿಮಠ, ದುಂಡಪ್ಪ ಗರಗದ, ಸಂತೋಷ ಪಾಟೀಲ ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ರಾಜು ಹಕ್ಕಿ ನಿರೂಪಿಸಿದರು. ಪ್ರಕಾಶ ಮೆಳವಂಕಿ ಸ್ವಾಗತಿಸಿದರು. ಕುಮಾರ ಕಡೇಮನಿ ಪ್ರಾರ್ಥಿಸಿದರು. ರಾಮಕೃಷ್ಣ ಹೋಟಕರ್ ವಂದಿಸಿದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group