ಸಿಂದಗಿ : ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ತಾಲೂಕಿನ ಕಡಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾತಂತ್ರ್ಯ ಇದೆ. ದೇಶದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರಿದ್ದೇವೆ. ತವರು ಮನೆಯಲ್ಲಿ ಅಪ್ಪ, ಅಣ್ಣ ಹೇಳಿದಂತೆ ಮದುವೆಯಾದ ಮೇಲೆ ಗಂಡ ಹೇಳಿದಂತೆ ಮತ ಚಲಾಯಿಸುತ್ತ ಬಂದಿದ್ದೇವೆ. ನಮ್ಮ ಬೇಡಿಕೆ ಏನು ಎಂದು ಯಾರಿಗೂ ಕೇಳೋಲ್ಲ. ಆದರೆ, ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಕಟ್ಟಿಗೆಯಿಂದ ಅಡುಗೆ ಮಾಡುವ ತೊಂದರೆ ತಪ್ಪಿಸಲು ಉಜ್ವಲ ಯೋಜನೆ ಜಾರಿಗೆ ತಂದು ದೇಶಾದ್ಯಂತ ಸುಮಾರು 8 ಕೋಟಿ ಮನೆಗಳಿಗೆ ಅಡಿಗೆ ಅನಿಲ್ ಗ್ಯಾಸ್ ನೀಡುವ ಮೂಲಕ ಮಹಿಳೆಯರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ಹೆಣ್ಣು ಮಕ್ಕಳ ರಕ್ಷಣೆಗೆ ಬೇಟಿ ಪಡಾವೊ ಬೇಟಿ ಬಚಾವೊ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು.
ರಾಜ್ಯದ ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಹುಟ್ಟಿದ ಪ್ರತಿಯೊಂದು ಹೆಣ್ಣು ಮಗುವನ್ನು ಭಾಗ್ಯಲಕ್ಷ್ಮಿ ಎಂದು ಕರೆದು ಹುಟ್ಟಿದ ಹೆಣ್ಣು ಮಗುವಿಗೆ ಭಾಗ್ಯಲಕ್ಷ್ಮೀ ಬಾಂಡ್ ನೀಡುವ ಯೋಜನೆ ಜಾರಿಗೆ ತಂದಿದ್ದಾರೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರ ಮಕ್ಕಳು ಉನ್ನತ ಶಿಕ್ಷಣ ಕಲಿಯಲು ಅನುಕೂಲವಾಗಲೆಂದು ವಿದ್ಯಾ ನಿಧಿ ಯೋಜನೆ ಜಾರಿಗೆ ತಂದಿದ್ದಾರೆ. ರೈತರಿಗೂ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಿಸಾನ್ ಸಮ್ಮಾನ ಯೋಜನೆ ಮೂಲಕ ಪ್ರತಿಯೊಬ್ಬರ ರೈತರ ಖಾತೆಗಳಿಗೆ ನೇರವಾಗಿ ಹಣ ಬಿಡುತ್ತಾರೆ. ನಮ್ಮ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅದಕ್ಕೆ 4000 ರೂ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದ್ದಾರೆ.
ಸಿಂದಗಿಯಲ್ಲಿ ರಮೇಶ್ ಬೂಸನೂರು ಅವರನ್ನು ಈ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಕ್ತಿ ಬಲಪಡಿಸುವಂತೆ ಸಚಿವರು ಮನವಿ ಮಾಡಿದರು.
ಕಾರ್ಯಕ್ರಮಕ್ಕೂ ಮೊದಲು ಸಚಿವರು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಹಾಗೂ ಸಾಮಾಜಿಕ ಜಾಲದ ಪ್ರಮುಖರ ಜೊತೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ವಸತಿ ಸಚಿವ ವಿ. ಸೋಮಣ್ಣ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಮಲ್ಲಿಕಾರ್ಜುನ ಜೋಗುರ ಸೇರಿದಂತೆ ಅನೇಕರು ಹಾಜರಿದ್ದರು.