ಶಹಾಪುರ: ಉದ್ಘಾಟನೆಗೊಳ್ಳುವುದಕ್ಕಿಂತ ಮುಂಚೆಯೇ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿರುವುದು ತಾಲ್ಲೂಕಿನ ಖ್ಯಾತನಾಳ ಗ್ರಾಮದಲ್ಲಿ ಕಂಡುಬಂದಿದೆ.
ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಸಿಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರ ಸಾಕಷ್ಟು ಅನುದಾನ ನೀಡಿದರೂ ಕೂಡ ಗುತ್ತಿಗೆದಾರರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಯೋಜನೆ ಹಳ್ಳಹಿಡಿದಂತಾಗಿದೆ. ಅಧಿಕಾರಿಗಳು ಸಾರ್ವಜನಿಕರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂಬ ಕೂಗು ಗ್ರಾಮದಲ್ಲಿ ಕೇಳಿಬರುತ್ತಿದೆ.
ಸಾಮಗ್ರಿಗಳ ಕಳುವು:
ಈ ಘಟಕದಲ್ಲಿ ಅಳವಡಿಸಿರುವ ಸಾಮಗ್ರಿಗಳನ್ನು ಗ್ರಾಮದ ಕಿಡಿಗೇಡಿಗಳು ರಾತ್ರೋ ರಾತ್ರಿ ಕಿತ್ತುಕೊಂಡು ಹೋಗಿದ್ದಾರೆ ಇದರ ಬಗ್ಗೆ ಕಿಂಚಿತ್ತಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಯೋಚನೆ ಮಾಡುತ್ತಿಲ್ಲ.
ಕಳೆದ ಎರಡು ವರ್ಷಗಳ ಹಿಂದೆಯೇ ಈ ಕಾಮಗಾರಿ ಜರುಗಿದ್ದು ಬಿಲ್ ಮಾತ್ರ ಗುತ್ತಿಗೆದಾರರು ಸಂಪೂರ್ಣವಾಗಿ ಪಡೆದುಕೊಂಡಿದ್ದಾರೆ ಎಂದು ಯುವ ಮುಖಂಡ ಕಮಲ್ ಪಟೇಲ್ ಆರೋಪಿಸಿದ್ದಾರೆ.
ಇದರ ಬಗ್ಗೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಫೋನ್ ಮಾಡಿ ವಿಚಾರಿಸಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮುಖಂಡರು ಇತ್ತ ಬಂದು ಆಶ್ವಾಸನೆ ನೀಡಿ ಹೋಗುತ್ತಾರೆ; ನಮ್ಮ ಕನಸು ಗಗನ ಕುಸುಮವಾಗಿಯೇ ಉಳಿದಿದೆ ನಮ್ಮೂರಿಗೆ ಶುದ್ಧ ಕುಡಿಯುವ ನೀರು ಇಲ್ಲ ರಸ್ತೆಗಳಿಲ್ಲಾ ಇದರಿಂದ ಅಭಿವೃದ್ಧಿ ಮರೀಚಿಕೆಯಾಗಿದೆ.
ಅಧಿಕಾರಿಗಳ ಅಮಾನತಿಗೆ ಆಗ್ರಹ:
ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಹಾಗೂ ಈ ಕಾಮಗಾರಿಗೆ ಸಂಬಂಧಿಸಿದ ಅಧಿಕಾರಿಗಳು ಅಮಾನತುಗೊಳಿಸಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈಗಾಗಲೇ ಗ್ರಾಮದಲ್ಲಿ ಸಾಕಷ್ಟು ನೀರಿನ ಅಭಾವ ತಲೆದೋರಿದೆ ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರೂ ಪ್ರಯೋಜನೆಯಾಗುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಶುದ್ಧ ಕುಡಿವ ನೀರಿನ ಘಟಕ ಪ್ರಾರಂಭಿಸಬೇಕು ಇಲ್ಲದಿದ್ದರೆ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡಿದ್ದಾರೆ