ಬೀದರ – ರಸ್ತೆ ಅಪಘಾತದಲ್ಲಿ ಜಖಂಗೊಂಡಿದ್ದ ಕಾರೊಂದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಂಡ ಬೀದರ್ ಪೊಲೀಸರು.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕು ತಡೋಳ ಗ್ರಾಮದ ಸಮೀಪ ನಡೆದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಪತ್ತೆಯಾಗಿದೆ. ನೆರೆಯ ತೆಲಂಗಾಣದ ದಿಂದ ಮಹಾರಾಷ್ಟ್ರಕ್ಕೆ ಇನ್ನೋವ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದಾಗ ರಾಷ್ಟ್ರೀಯ ಹೆದ್ದಾರಿ-65ರ ಮೇಲಿರುವ ತಡೋಳ ಸಮೀಪ ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಷ್ಕಾಳಜಿಯಿಂದ ಅಪರಿಚಿತ ವಾಹನವೊಂದಕ್ಕೆ ಕಾರು ಡಿಕ್ಕಿಯಾದ ಕಾರಣ ಕಾರು ಜಖಂಗೊಂಡು ರಸ್ತೆ ಬದಿ ನಿಂತಿದೆ. ತಕ್ಷಣ ಕಾರಿನ ಚಾಲಕ ನಾಪತ್ತೆಯಾಗಿದ್ದಾನೆ. ಅಪಘಾತ ಸುದ್ದಿ ತಿಳಿದ ಗ್ರಾಮೀಣ ಠಾಣೆ ಪೊಲೀಸ್ರ ತಂಡ ಸ್ಥಳಕ್ಕೆ ಭೇಟಿ ನೀಡಿ ಕಾರು ಪರಿಶೀಲಿಸಿದಾಗ ಕಾರಿನಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ.
29.80 ಲಕ್ಷ ರೂ. ಮೌಲ್ಯದ 298 ಕೆಜಿ ಗಾಂಜಾ ಪತ್ತೆಯಾಗಿದ್ದು, ಗಾಂಜಾ ಹಾಗೂ ಕಾರನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದ ಹುಮನಾಬಾದ ಡಿವೈಎಸ್ಪಿ ಸೋಮಲಿಂಗ ಕುಂಬಾರ, ಗ್ರಾಮೀಣ ಠಾಣೆ ಪಿಎಸ್ಐ ಕಿರಣ ಧೋತ್ರೆ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿ ಕಾರು ಚಾಲಕನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ