ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕುಗಳ 30 ಗ್ರಾಪಂಗಳಿಗೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಸ್ವಚ್ಛ ವಾಹಿನಿ ವಾಹನಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಘಟಕಗಳ ಸ್ವಚ್ಛತೆ ಸೇರಿದಂತೆ ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈಗಾಗಲೇ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ 30 ಗ್ರಾಪಂಗಳಿಗೆ ಸ್ವಚ್ಛ ವಾಹಿನಿಗಳನ್ನು ವಿತರಣೆ ಮಾಡಲಾಗಿದೆ.
ಇವುಗಳ ಸದ್ಭಳಕೆ ಮಾಡಿಕೊಳ್ಳಬೇಕು. ಗ್ರಾಪಂಗಳಿಂದ ಬಿಡುಗಡೆಯಾಗಿರುವ ಅನುದಾನ ಸರಿಯಾದ ರೀತಿ ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶ ಅಭಿವೃದ್ಧಿ ಪಡಿಸಬೇಕು. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗೋಕಾಕ ಇಒ ಮುರಳೀಧರ್ ದೇಶಪಾಂಡೆ, ಮೂಡಲಗಿ ಇಒ ಎಫ್.ಜಿ.ಚಿನ್ನನವರ, ಸಹಾಯಕ ನಿರ್ದೇಶಕರು (ಗ್ರಾಉ) ಸಂಗಮೇಶ ರೊಡನ್ನವರ, ಸಹಾಯಕ ನಿರ್ದೇಶಕರು (ಪಂರಾ) ಚಂದ್ರಶೇಖರ ಬಾರ್ಕಿ ಹಾಗೂ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒಗಳು ಉಪಸ್ಥಿತರಿದ್ದರು.