ಹೊಸದಿಲ್ಲಿ: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಜೂನ್ 11ಕ್ಕೆ ದೇಶಾಧ್ಯಂತ ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಹಲವಾರು ರಾಜ್ಯಗಳಲ್ಲಿ ಇಂಧನ ಬೆಲೆಗಳು ಈಗಾಗಲೇ 100 ರೂ. ಗಡಿ ದಾಟಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವು ಬೀದಿಗಿಳಿಯಲು ನಿರ್ಧರಿಸಿದೆ. ಪಕ್ಷದ ಎಲ್ಲ ರಾಜ್ಯ ಘಟಕಗಳಿಗೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಸೂಚಿಸಿವೆ.
ಸಾರ್ವಜನಿಕ ಲೂಟಿ ಮತ್ತು ಬೆಲೆ ಏರಿಕೆ ವಿರುದ್ಧ ತುರ್ತಾಗಿ ಪ್ರತಿಭಟಿಸಲು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, ರಾಜ್ಯ ಘಟಕಗಳಿಗೆ ಸೂಚಿಸಿದ್ದಾರೆ. ಸಾಂಕೇತಿಕ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಕೇಂದ್ರದ ಜನವಿರೋಧಿ ನೀತಿ ವಿರುದ್ಧ ಅಭಿಯಾನ:
ಸಾಂಕ್ರಾಮಿಕ ರೋಗ, ಆರ್ಥಿಕ ಕುಸಿತ, ನಿರುದ್ಯೋಗ, ವೇತನ ಕಡಿತ, ಉದ್ಯೋಗ ಕಡಿತದಿಂದಾಗಿ ಸಂಕಷ್ಟದಲ್ಲಿರುವ ಜನರ ಮೇಲೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಅನಿಯಂತ್ರಿತ ಏರಿಕೆಯು ಬಲವಾದ ಹೊಡೆತ ನೀಡಿದೆ.
ಈ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಅಭಿಯಾನ ನಡೆಸುವಂತೆಯೂ ಸೂಚಿಸಿದ್ದಾರೆ.ಪೆಟ್ರೋಲ್ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಅದರ ಪರಿಣಾಮ ಎಲ್ಲ ಗೃಹಪಯೋಗಿ ಹಾಗೂ ಅಗತ್ಯ ವಸ್ತುಗಳ ಮೇಲೆ ಬೀರಿದೆ.
ಅನೇಕ ರಾಜ್ಯಗಳಲ್ಲಿ ಈಗಾಗಲೇ ಬೆಲೆ 100 ರೂ. ದಾಟಿದೆ.ಕಳೆದ ಒಂದು ತಿಂಗಳಿನಿಂದಲೂ ಇಂಧನ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದ್ದು, ಈಗ ಗರಿಷ್ಠ ಮಟ್ಟವನ್ನು ತಲುಪಿದೆ.