ಬೈಲಹೊಂಗಲ – ರಾಷ್ಟ್ರೀಕೃತ ಬ್ಯಾಂಕುಗಳಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು, ಪರೀಕ್ಷೆ ನಡೆಸುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಕುರಿತು, ಮಲತಾಯಿ ಧೋರಣೆ ಮುಂದುವರೆಸಿದ್ದು, ಹಿಂದಿ ಹಾಗೂ ಇಂಗ್ಲೀಷನಲ್ಲಿಯೇ ಪರೀಕ್ಷೆ ನಡೆಸಲು ನಿರ್ಧರಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಕನ್ನಡ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವಂತೆ ಬೆಳಗಾವಿ ಕಸಾಪ ಅಧ್ಯಕ್ಷರು ಆಗ್ರಹಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಹಾರಿಸಲಾಗಿರುವ ಕನ್ನಡ ಧ್ವಜ ಹರಿದು ಹೋಗಿದ್ದು, ಅದನ್ನು ಬದಲಾಯಿಸಿ ಹೊಸ ಕನ್ನಡ ಧ್ವಜ ಹಾರಿಸುವಂತೆ ಆಗ್ರಹಿಸಿ, ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಏಕಾಂಗಿ ಹೋರಾಟ ನಡೆಸಿದರು. ಇವರಿಗೆ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಕ.ಸಾ.ಪ.ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಶ್ರೀ. ಮೆಟಗುಡ್ಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಮಹಾನಗರ ಪಾಲಿಕೆಯು ಕೂಡಲೇ ಹೊಸ ಕನ್ನಡ ಧ್ವಜವನ್ನು ಹಾರಿಸಬೇಕೆಂದು ಆಗ್ರಹಿಸಿದ್ದಾರೆ.