ಮೂಡಲಗಿ: ಶಾಸ್ತ್ರೀಯ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಲು ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ (ಸಿ.ಐ.ಐ.ಎಲ್) ಮೂಲಕ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಮತ್ತು ಪ್ರಗತಿಗಾಗಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮೈಸೂರಿನ ಸಿ.ಐ.ಐ.ಎಲ್ ಮೂಲಕ ಏಳು ಪ್ರಾದೇಶಿಕ ಭಾಷೆಗಳ ಕೇಂದ್ರಗಳೊಂದಿಗೆ ನಿಗದಿಪಡಿಸಿದ ಮತ್ತು ನಿಗದಿಪಡಿಸಲಾದ ಭಾಷೆಗಳ ಜೊತೆಗೆ ಶಾಸ್ತ್ರೀಯ ಭಾಷೆಗಳನ್ನು ಒಳಗೊಂಡ ಕಲಿಕೆಗಾಗಿ ಉತ್ತೇಜಿಸಲಾಗಿದೆ ಎಂದು ತಿಳಿಸಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ 5 ರಿಂದ 8ನೇ ತರಗತಿಯವರೆಗೆ ಮಾತೃ ಭಾಷೆಯಲ್ಲಿ ಕಲಿಕೆಗಾಗಿ ಉತ್ತೇಜನೆ ನೀಡಲಾಗಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಮುಖಾಂತರ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ತಮ್ಮ ಕೋರ್ಸಗಳನ್ನು ಸ್ಥಳೀಯ ಭಾಷೆಗಳಲ್ಲಿಯೂ ನೀಡಲು ಅನುಮತಿ ನೀಡುವ ಮಾರ್ಗಸೂಚಿಗಳನ್ನು ಹೊರಡಿಸಿದೆ. 1ರಿಂದ 12 ನೇ ತರಗತಿಗಳಿಗೆ ಬೋಧನಾ ಸಂಪನ್ಮೂಲಗಳು ವಿವಿಧ ಭಾರತೀಯ ಭಾಷೆಗಳಲ್ಲಿ ಸರ್ಕಾರದ ದೀಕ್ಷಾ ಪೋರ್ಟಲ್ನಲ್ಲಿ ಲಭ್ಯವಿದೆ. ಜಂಟಿ ಪ್ರವೇಶ ಪರೀಕ್ಷೆ (ಜೆ.ಇ.ಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)ಗಳನ್ನು ವಿವಿಧ ಭಾರತೀಯ ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದರು ಮಾಹಿತಿ ಹಂಚಿಕೊಂಡರು.