ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬಾ ದೇವಿ

Must Read

ಸುಮಾರು 12 ನೇ ಶತಮಾನದಲ್ಲಿ ಹಾಸನದ ಚನ್ನಪಟ್ಟಣ ಪಾಳೆಗಾರನಾದ ಕೃಷ್ಣಪ್ಪ ನಾಯ್ಕರಿಗೆ ಕನಸಿನಲ್ಲಿ ದೇವಿಯು ‘ನಾನು ಇಂತಹ ಜಾಗದಲ್ಲಿ ಹುತ್ತದ ರೂಪದಲ್ಲಿ ನೆಲೆಸಿದ್ದೇನೆ, ನನಗೊಂದು ಗುಡಿಯನ್ನು ಕಟ್ಟಿಸು’ ಎಂದು ಹೇಳಿ ಮಾಯವಾದಳು. ನಂತರ ಪಾಳೆಗಾರನಾದ ಕೃಷ್ಣಪ್ಪ ನಾಯ್ಕರು ಹುತ್ತದ ರೂಪದಲ್ಲಿದ್ದ ದೇವಿಯ ಗುಡಿಯನ್ನು ಕಟ್ಟಿಸಿದರು ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.

ದೇವಿಯರು ನೆಲೆಸಿದ ಪುರಾಣ ಕಥೆ:

ಸಪ್ತಮಾತೆಯರು ಕಾಶಿಯಿಂದ ದಕ್ಷಿಣದ ಕಡೆಗೆ ಆಕಾಶಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದಾಗ ಹಾಸನದ ಮನೋಹರವಾದ ಸೌಂದರ್ಯಕ್ಕೆ ಮನಸೋತು ಇಲ್ಲಿಯೇ ನೆಲೆನಿಂತರು. ಆ ಸಪ್ತಮಾತೆಯರಾದ ಬ್ರಾಹ್ಮದೇವಿ, ಮಾಹೇಶ್ವರಿ, ಕೌಮಾರಿ, ವೈಷ್ಣವೀ, ವಹಾಹಿಣಿ, ಇಂದ್ರಾಣಿ ಮತ್ತು ಚಾಮುಂಡಿ. ಇವರಲ್ಲಿ ವೈಷ್ಣವಿ, ಕೌಮಾರಿ, ಮಾಹೇಶ್ವರೀ  ದೇವಿಯರು ದೇವಸ್ಥಾನದಲ್ಲಿ ಹುತ್ತದ ರೂಪದಲ್ಲಿ ಹಾಗೂ ವಹಾಹಿಣಿ, ಇಂದ್ರಾಣಿ, ಚಾಮುಂಡಿ ನಗರದ ಮಧ್ಯಭಾಗದಲ್ಲಿರುವ ದೇವಿಗೆರೆಯಲ್ಲಿ (ಕೆರೆ) ನೆಲೆಸಿರುವರು. ಬ್ರಾಹ್ಮದೇವಿಯು ಹಾಸನದಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಕೆಂಚಮ್ಮನ ಹೊಸಕೋಟೆಯಲ್ಲಿ ಕೆಂಚಾಂಬೆಯ ಹೆಸರಿನಲ್ಲಿ ನೆಲೆಸಿದ್ದಾಳೆ.

ಹಾಸನಕ್ಕೆ ಹಿಂದೆ ಸಿಂಹಾಸನಪುರಿ ಎಂದು ಹೆಸರಿತ್ತು. ದೇವಿಯರು ನೆಲೆಸಿದ ನಂತರ ಹಾಸನ ಎಂಬ ಹೆಸರು ಬಂದಿತು. ದೇಶ-ವಿದೇಶಗಳಲ್ಲಿರುವ ಪ್ರತಿಯೊಂದು ದೇವಸ್ಥಾನದಂತೆ ಇಲ್ಲಿ ಪ್ರತಿದಿನ ಭಕ್ತರಿಗೆ ದೇವಿಯರ ದರ್ಶನ ಭಾಗ್ಯವು ಇರುವುದಿಲ್ಲ. ವರ್ಷಕ್ಕೆ ಕೇವಲ ಹತ್ತರಿಂದ ಹನ್ನೆರಡು ದಿನ ಮಾತ್ರ ಬಾಗಿಲು ತೆಗೆದಾಗ ದೇವಿಯರ ದರ್ಶನದ ಲಾಭವಾಗುತ್ತದೆ.

ಆಶ್ವಯುಜ ಮಾಸದ ಹುಣ್ಣಿಮೆ ಕಳೆದ ನಂತರ ಬರುವಂತಹ ಗುರುವಾರದಂದು ಬಾಗಿಲನ್ನು (ವರ್ಷಕೊಮ್ಮೆ) ತೆರೆಯಲಾಗುತ್ತದೆ ಮತ್ತು ಬಲಿಪಾಡ್ಯದ ಮೂರನೇ ದಿನದಂದು ಬೆಳಗ್ಗೆ ದೇವಸ್ಥಾನದ ಬಾಗಿಲನ್ನು ಮುಚ್ಚುತ್ತಾರೆ.

ದೇವಸ್ಥಾನದ ವೈಶಿಷ್ಟ್ಯ:

ಈ ಸಂದರ್ಭದಲ್ಲಿ ಇರುವ ಇನ್ನೊಂದು ವೈಶಿಷ್ಟ್ಯವೇನೆಂದರೆ ದೇವಸ್ಥಾನದ ಬಾಗಿಲನ್ನು ಮುಚ್ಚುವ ದಿನ ದೇವಿಯರಿಗೆ ಬಳೆ, ಅರಶಿನ, ಕುಂಕುಮ, ಹೂವು ಮುಂತಾದ ಮಂಗಳದ್ರವ್ಯಗಳನ್ನು ಅರ್ಪಿಸಿ ನಂದಾದೀಪವನ್ನು ಉರಿಸಿಡುತ್ತಾರೆ. ಮುಂದಿನ ವರ್ಷ ದೇವಸ್ಥಾನದ ಬಾಗಿಲು ತೆಗೆಯುವವರೆಗೆ ಹೂವು ಬಾಡದೇ ನಂದಾದೀಪ ನಂದದೇ ಹಾಗೆಯೇ ಉರಿಯುತ್ತಿರುತ್ತದೆ. ನಂದಾ ದೀಪ ಆರಿ, ಹೂವು ಬಾಡಿದ್ದಲ್ಲಿ ಆ ವರ್ಷ ದೇಶಕ್ಕೆ ಆಪತ್ತು ಸಂಭವಿಸುವ ಸೂಚನೆಯಾಗಿರುತ್ತದೆ ಎಂದು ಇಲ್ಲಿನ ಜನರ ನಂಬಿಕೆಯಾಗಿದೆ.

ಈ ದೇವಿಯ ಭಾವಚಿತ್ರವನ್ನು ಯಾರೂ ಮನೆಯಲ್ಲಿ ಇಡುವುದಿಲ್ಲ. ಕಾರಣ ಮನೆಯಲ್ಲಿ ಮಡಿಮೈಲಿಗೆ ಆಚರಿಸದಿದ್ದರೆ ಮನೆಯವರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಊರಿನ ಯಾವುದೇ ಮನೆಯಲ್ಲಿ ಈ ದೇವಿಯ ಭಾವಚಿತ್ರವಿಲ್ಲ.

ದೇವಿಕೆರೆಯ ವೈಶಿಷ್ಟ್ಯ:

ನಗರದ ಮಧ್ಯಭಾಗದಲ್ಲಿ ಹಾಗೂ ದೇವಸ್ಥಾನದಿಂದ ಕೇವಲ 100 ಮೀ. ದೂರದಲ್ಲಿರುವ ದೇವಿಗೆರೆಯಲ್ಲಿ ಮೂವರು ದೇವಿಯರು ವಾಸವಾಗಿದ್ದಾರೆ. ಈ ದೇವಿಯರನ್ನು ಪ್ರತಿ ದಿನ ಭೇಟಿಯಾಗಲು ದೇವಸ್ಥಾನದಿಂದ ಅಕ್ಕಂದಿರು ದೇವಿಗೆರೆಗೆ ಬರುತ್ತಾರೆ ಮತ್ತು ಈ ದೇವಿಗೆರೆಯಲ್ಲಿ ಪ್ರತಿನಿತ್ಯ ಸ್ನಾನ ಮಾಡುತ್ತಾರೆ ಹಾಗೂ ದೇವಸ್ಥಾನದಲ್ಲಿ ಮಾಡಿದ ಪೂಜೆಯ ನೀರಿನ ಅಭಿಷೇಕವು ಈ ದೇವಿಗೆರೆಯಲ್ಲಿ ಬಂದು ಬೀಳುತ್ತದೆ ಎಂದು ಇಲ್ಲಿನ ನಂಬಿಕೆಯಾಗಿದೆ.


ಹೇಮಂತ ಚಿನ್ನು
ಕರ್ನಾಟಕ ಶಿಕ್ಷಕರ ಬಳಗ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group