ಬೆಳಗಾವಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಚಂದ್ರಯಾನ, ಮಂಗಳಯಾನದಂತಹ ಬ್ರಹತ್ ಯೋಜನೆಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ರೂಪಿಸಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಶ್ವವೇ ಭಾರತದತ್ತ ಆಶ್ಚರ್ಯದಿಂದ ನೋಡುವಂತೆ ಮಾಡಿದ ಇಸ್ರೊ ಭಾರತದ ಹೆಮ್ಮೆ ಎಂದು ಅಲ್ಲಿನ ವಿಶ್ರಾಂತ ವಿಜ್ಞಾನಿ ಎಸ್. ಹಿರಿಯಣ್ಣ ಅಭಿಪ್ರಾಯಪಟ್ಟರು.
ಅವರು ಶನಿವಾರ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸೆಮಿನಾರ್ ಹಾಲ್ನಲ್ಲಿ ರಾಜ್ಯ ವಿಜ್ಞಾನ ಪರಿಷತ್ತು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಡಾ. ಸ. ಜ. ನಾಗಲೋಟಿಮಠ ವಿಜ್ಞಾನ ಕೇಂದ್ರ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಸರ್ ಸಿ. ವಿ. ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಒಂದು ಕಾಲದಲ್ಲಿ ಉಪಗ್ರಹಗಳನ್ನು ಎತ್ತಿನ ಬಂಡಿಯಲ್ಲಿ ಸಾಗಿಸುತ್ತಿದ್ದ ಇಸ್ರೊ ಇಂದು ಬೃಹತ್ ಟ್ರಕ್ಗಳನ್ನು ಬಳಸಿಕೊಳ್ಳುತ್ತಿದೆ. ಇಲ್ಲಿರುವ ಅಪಾರ ಅವಕಾಶಗಳನ್ನು ರಾಜ್ಯದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮನ್ನು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ, ಜಗತ್ತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ವಿದ್ಯಾರ್ಥಿ ಹಾಗೂ ಶಿಕ್ಷಕ ಸಮುದಾಯ ಅದರ ಸದುಪಯೋಗ ಪಡೆದುಕೊಂಡು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೆ.ಎಲ್.ಇ. ಡಾ. ಪ್ರಬಾಕರ ಕೋರೆ ಆಸ್ಪತ್ರೆಯ ಸಿ.ಎಮ್.ಒ. ಡಾ. ಎಮ್. ವಿ. ಜಾಲಿ ಮಾತನಾಡಿ ವಿಜ್ಞಾನ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಿದಾಗ ಮಾತ್ರ ದೇಶದ ಅಭಿವ್ರದ್ಧಿ ಸಾಧ್ಯ. ಜಗತ್ತಿನಲ್ಲಿ ವೈಜ್ಞಾನಿಕ ಸಂಶೋಧನೆಗಳು ಹೆಚ್ಚಾದಷ್ಟು ಜನಸಾಮಾನ್ಯರ ಶ್ರಮ ಕಡಿಮೆಯಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಪರಿಷತ್ತಿನ ಉಪಾಧ್ಯಕ್ಷ ಬಿ. ದೊಡ್ಡಬಸಪ್ಪ ಮಾತನಾಡಿ ರಾಜ್ಯದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಚುರುಕತನ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಸಂಘಟಿಸಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಜಗದೀಶ ಐ. ಎಚ್., ಕರಾವಿಪ ಖಜಾಂಚಿ ಈ ಬಸವರಾಜು, ಉದ್ಯಮಿ ಮಹಾಂತ ವಕ್ಕುಂದ, ಕರಾವಿಪ ಚಿಕ್ಕೋಡಿ ಜಿಲ್ಲಾ ಸಮಿತಿ ಅಧ್ಯಕ್ಷ ಡಾ. ಭೋಜರಾಜ ಬೆಳಕೂಡ, ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ವೇದಿಕೆ ಮೇಲೆ ರಾಜ್ಯ ಸಂಯೋಜಕ ಅನ್ನದಾನೇಶ್ವರ ಹಳ್ಳಿಕೇರಿ, ಕಾರ್ಯಕಾರಿ ಸಮಿತಿ ಸದಸ್ಯ ಅಣದೂರು ಮಹಾರುದ್ರಪ್ಪ, ಕರಾವಿಪ ಬೆಳಗಾವಿ ಜಿಲ್ಲಾ ಸಮಿತಿ ಅಧ್ಯಕ್ಷ ಮೋಹನ ಬಸವನಗೌಡ ಪಾಟೀಲ, ಕ್ವಿಝ್ ಮಾಸ್ಟರ್ ಆರ್. ಎಮ್. ದೇಶಪಾಂಡೆ, ಜಿ. ಬಿ. ನೇಸರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯೆ ಮೀನಾಕ್ಷಿ ಕುಡಸೋಮಣ್ಣವರ ಸ್ವಾಗತಿಸಿದರು. ಜಿಲ್ಲಾ ಸಮಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ ಕೋಳಿ ವಂದಿಸಿದರು. ಶಿಕ್ಷಕ ಬಿ. ಜಿ. ಬಾನೆ ನಿರೂಪಿಸಿದರು.