ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ – ಶಾಸಕ ಬಾಲಚಂದ್ರ ಜಾರಕಿಹೊಳಿ

0
76

ತಾಲೂಕಾ ಅಧಿಕಾರಿಗಳ ಸಭೆ ನಡೆಸಿದ ಶಾಸಕರು

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಅನುದಾನ ಬರುತ್ತಿಲ್ಲ 

ಮೂಡಲಗಿ  – ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರದಂದು ಇಲ್ಲಿಯ ಪುರಸಭೆ ಸಭಾ ಭವನದಲ್ಲಿ ಕರೆಯಲಾಗಿದ್ದ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಅವರು ಸೂಚಿಸಿದರು.

ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸಿರುವುದರಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಆದರೂ ಸಹ ಮೂಡಲಗಿ ಪುರಸಭೆಯ ವ್ಯಾಪ್ತಿಯ ಸಾರ್ವಜನಿಕರಿಗೆ ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕು. ಯಾವದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈಗಾಗಲೇ ಪುರಸಭೆ ವ್ಯಾಪ್ತಿಯಲ್ಲಿ ಇ – ಖಾತಾ ಅಭಿಯಾನವೂ ಚಾಲನೆಯಲ್ಲಿದೆ. ಇಲ್ಲಿಯತನಕ ಸುಮಾರು ೫೩೮ ಅರ್ಜಿಗಳು ನೋಂದಣಿಯಾಗಿವೆ. ಇದರಿಂದ ಸುಮಾರು ೨.೫೦ ಕೋಟಿ ರೂಪಾಯಿ ಆದಾಯವನ್ನು ನಿರೀಕ್ಷೆ ಮಾಡಲಾಗಿದೆ. ಸರಕಾರದ ಅನುದಾನವು ಬಿಡುಗಡೆಯಾದರೆ ಮೂಡಲಗಿ ಪಟ್ಟಣದಲ್ಲಿರುವ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡಲಾಗುತ್ತಿದೆ. ಅಂದಾಜು ೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹದಗೆಡುತ್ತಿರುವ ರಸ್ತೆಗಳನ್ನು ಸುಧಾರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕಳೆದ ಎರಡು ವರ್ಷಗಳಿಂದ ಪುರಸಭೆಯ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಯಾವ ಅನುದಾನವೂ ಬಂದಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳನು ಕೈಕೊಳ್ಳಲು ಸಾಧ್ಯವಾಗುತ್ತಿಲ್ಲ. ರಸ್ತೆಗಳ ಸುಧಾರಣೆಗೆ ಅನುದಾನವನ್ನು ನೀಡುವಂತೆಯೂ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಮೂಡಲಗಿ ಪಟ್ಟಣವು ದಿನೇ ದಿನೇ ಬೆಳೆಯುತ್ತಿದೆ. ಹೀಗಾಗಿ ಜನದಟ್ಟಣೆಯಾಗುತ್ತಿದೆ. ಕೂಡಲೇ ಪೊಲೀಸ್ ಅಧಿಕಾರಿಗಳು ಸಂಚಾರವನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಕೊಳ್ಳುವಂತೆ ಅವರು ಸೂಚಿಸಿದರು.

ಮೂಡಲಗಿ ತಹಸೀಲ್ದಾರ್ ಶಿವಾನಂದ ಬಬಲಿ, ಪುರಸಭೆಯ ಮುಖ್ಯಾಧಿಕಾರಿ ತುಕಾರಾಂ ಮಾದರ, ತಾಲೂಕು ಪಂಚಾಯತ್ ಎ ಓ ಚಿನ್ನನ್ನವರ, ಪುರಸಭೆಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here