ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ ಮಾರ್ಚ್ ೧೬ ರಂದು ಭಾನುವಾರ ಮುಂಜಾನೆ ೧೦.೦೦ ಗಂಟೆಗೆ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ, ಗಾಯನ ಕ್ಷೇತ್ರದಲ್ಲಿ ಹಾಗೂ ಸೇವಾ ಕ್ಷೇತ್ರದಲ್ಲಿ ಮತ್ತು ಕಾವ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಷ್ಟ್ರಮಟ್ಟದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಸುಮಾರು ಎರಡು ನೂರು ಜನಗಳಿಗೆ ಸನ್ಮಾನ ನಡೆಸುವ ಕಾರ್ಯಕ್ರಮ ಹಾಗೂ ಐದು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಇರುತ್ತದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿಯ ಸಾಹಿತಿಗಳಾದ ಡಾಕ್ಟರ್ ಹಸೀನರವರು ನೆರವೇರಿಸಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಾಮು ಎನ್ ರಾಥೋಡ್ ವಹಿಸಿಕೊಂಡಿದ್ದಾರೆ. ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷರಾದ ಚಂದ್ರಶೇಖರ್ ಹಡಪದರವರು ಹಾಗೂ ಕೃತಿ ಲೋಕಾರ್ಪಣೆಯನ್ನು ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಧು ನಾಯ್ಕ ಲಂಬಾಣಿ ರವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಸಾಹಿತಿ ಗೊರೂರು ಅನಂತರಾಜು ಹಾಗೂ ಗೋಪಾಲ ನಾಯಕ್ ವಾಯ್ಸ್ ಆಫ್ ಬಂಜಾರ ಇವರು ವಹಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 35 ಜನ ಗಾಯಕರಿಂದ ನಾಡಗೀತೆ ಹಾಗೂ ರೈತ ಗೀತೆ ನೆರವೇರಿಸಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಘಟಕದಿಂದ ಪ್ರಾಯೋಜಿತ ಕಾರ್ಯಕ್ರಮಗಳು ಜರುಗುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.