ಬೀದರ – ಸಮಾಜದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಇಲ್ಲಿಯ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ರಕ್ಷಣೆ ಕೊಡಲು ಪೊಲೀಸರು ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅನೇಕ ಜನ ಕರ್ತವ್ಯದ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಅವರು, ದೇಶದಲ್ಲಿ ಪ್ರಸಕ್ತ ವರ್ಷದಲ್ಲಿ ಹುತಾತ್ಮರಾದ 264 ಪೊಲೀಸ್ ಸಿಬ್ಬಂದಿಯ ಹೆಸರು ಓದಿದರು.
ಪೊಲೀಸ್ ಕವಾಯತ್ ಮೈದಾನದಲ್ಲಿರುವ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಹೂಮಾಲೆಗಳಿಂದ ಅಲಂಕಾರ ಮಾಡಲಾಗಿತ್ತು. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಬೀದರ್ ಡಿವೈಎಸ್ಪಿ ಕೆ.ಎಂ. ಸತೀಶ್, ಭಾಲ್ಕಿ ಎಎಸ್ಪಿ ಪ್ರತೀಕ್ ಶಂಕರ, ಹುಮನಾಬಾದ್ ಡಿವೈಎಸ್ಪಿ ಶಿವಾಂಚು ರಜಪೂತ್, ಡಿವೈಎಸ್ಪಿ ಸುನೀಲ್ ಕೊಡ್ಲಿ, ಕಂಟ್ರೋಲ್ ರೂಮ್ ಇನ್ಸ್ಪೆಕ್ಟರ್ ಮಹಮ್ಮದ್ ಮೋಸಿನ್ ಪಟೇಲ್ ಹಾಗೂ ಪೊಲೀಸ್ ಅಧಿಕಾರಿಗಳು ಇದ್ದರು. ಪೊಲೀಸ್ ಕುಟುಂಬದವರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.