ಮೂಡಲಗಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯಲ್ಲಿ ಪ್ರವಾಹದಿಂದ ಸಾಕಷ್ಟು ಮನೆಗಳು ಹಾನಿಗೊಳಗಾಗಿದ್ದು, ಸರ್ವೆ ಕಾರ್ಯದಲ್ಲಿ ಸಾಕಷ್ಟು ಗೊಂದಲದಿಂದಾಗಿ ಅರ್ಹ ಫಲಾನುಭವಿಗಳಿಗೆ ಸಿಕ್ಕಿಲ್ಲ. ಇದರಿಂದ ತೊಂದರೆಯಾಗುತ್ತಿದ್ದು, ಸರ್ವೆ ಮಾಡಿದಂತಹ ಪಟ್ಟಿಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವ ಮೊದಲು ಗ್ರಾಮ ಪಂಚಾಯತಿಯಲ್ಲಿ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಬೇಕು, ಜನರು ಆ ಪಟ್ಟಿಯಲ್ಲಿ ಹೆಸರು ಇದೆಯೋ, ಇಲ್ಲವೋ ಎಂಬುದನ್ನು ಗಮನಿಸಲು ಅವಕಾಶವಿರುತ್ತದೆ. ಏನಾದರೂ ಈ ಬಗ್ಗೆ ತಕರಾರು ಇದ್ದರೆ ಪಂಚಾಯತಿಗೆ ತಿಳಿಸುತ್ತಾರೆ. ಆವಾಗ ಇಲ್ಲದವರು ದಾಖಲಿಸಲು ಅನುಕೂಲವಾಗುತ್ತದೆ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಒತ್ತಾಯಿಸಿದಾಗ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳು ಗ್ರಾಮ ಪಂಚಾಯತಿಯಲ್ಲಿ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿ, ಆದೇಶಿಸಿದರು.
ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗೋಕಾಕ ನಗರದಲ್ಲಿ ಆರ್.ಟಿ.ಪಿ.ಆರ್ ಘಟಕವನ್ನು ಪ್ರಾರಂಭಿಸುವಂತೆ ಈ ಹಿಂದೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು, ಮುಖ್ಯಮಂತ್ರಿಗಳು ಶೀಘ್ರದಲ್ಲಿ ಗೋಕಾಕ ನಗರದಲ್ಲಿ ರೂ. 1.50 ಕೋಟಿ ವೆಚ್ಚದಲ್ಲಿ ಆರ್.ಟಿ.ಪಿ.ಸಿ.ಆರ್ ಘಟಕ ಪ್ರಾರಂಭಿಸಲಾಗುತ್ತಿದೆ ಎಂದರು.
ನನ್ನ ಮನವಿಗೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಈರಣ್ಣ ಕಡಾಡಿ ಹೇಳಿದರು.
ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ವಿಧಾನಸಭೆ ಉಪಸಭಾಪತಿ ಆನಂದ್ ಎಸ್.ಮಾಮನಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕರು, ಸಂಸದರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.