ಮುನವಳ್ಳಿ: ಸಮೀಪದ ಬೆನಕಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ಎನ್.ಆರ್.ನೀಲಾಕಾರಿ ಶಿಕ್ಷಕರಿಗೆ ರಾಜ್ಯ ಮಟ್ಟದ ಗ್ರಾಮಿಣ ಶಿಕ್ಷಕ ರತ್ನ ಪ್ರಶಸ್ತಿ ಲಭಿಸಿದ್ದು ಇದೇ ಪೆಬ್ರುವರಿ ೧೧ ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಜರುಗಲಿರುವ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಮಟ್ಟದ ೩ನೇ ಮಹಾ ಸಭೆಯ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಪ್ರಶಸ್ತಿ ಪ್ರದಾನ ಮಾಡಲಿರುವರು.
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದು ದಿವ್ಯ ಸಾನ್ನಿಧ್ಯವನ್ನು ಉಪ್ಪಿನ ಬೆಟಗೇರಿಯ ಪರಮಪೂಜ್ಯ ಶ್ರೀ ಗುರು ಕುಮಾರ ವಿರುಪಾಕ್ಷ ಮಹಾಸ್ವಾಮಿಗಳು ವಹಿಸುವರು.
ಗೌರವ ಉಪಸ್ಥಿತರಾಗಿ ಕಲ್ಲಿದ್ದಲು ಮತ್ತು ಗಣಿ ಹಾಗೂ ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವರಾದ ಸಂಸದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಗಣಿ ಮತ್ತು ಭೂವಿಜ್ಞಾನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಆಚಾರ ಹಾಲಪ್ಪ ಬಸಪ್ಪ, ಸಕ್ಕರೆ ಜವಳಿ ಮತ್ತು ಕೈಮಗ್ಗ ಖಾತೆ ಸಚಿವರಾದ ಶಂಕರಪಾಟೀಲ ಮುನೇನಕೊಪ್ಪ ಸೇರಿದಂತೆ ಜಗದೀಶ ಶೆಟ್ಟರ, ಅಮೃತ ದೇಸಾಯಿ ಪ್ರಸಾದ ಅಬ್ಬಯ್ಯಾ ಶ್ರೀಮತಿ ಕುಸುಮಾವತಿ ಶಿವಳ್ಳಿ ಮೊದಲಾದ ಗಣ್ಯರು ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ಸರಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗಾಗಿ ನಾವು-ನೀವು ವಿಷಯ ಕುರಿತು ಉಪನ್ಯಾಸವನ್ನು ಬೆಂಗಳೂರಿನ ಸಾಧನಾ ಐ.ಎ.ಎಸ್ ಕೋಚಿಂಗ್ ಸೆಂಟರಿನ ನಿರ್ದೇಶಕರಾದ ಡಾ.ಜ್ಯೋತಿ.ಕೆ.ಸಿ ಅವರು ನೀಡಲಿರುವರು ಎಂದು ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿರುವರು.