ಬೀದರ – ಒಬ್ಬ ಸರ್ಕಾರಿ ಅಧಿಕಾರಿಯಾಗಿ ಜಿಲ್ಲೆಯ ಬಸವಕಲ್ಯಾಣದ ತಹಶೀಲ್ದಾರ ರಾಗಿರುವ ಶ್ರೀಮತಿ ಸಾವಿತ್ರಿ ಸಲಗರ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಚಾರದ ಅಖಾಡಕ್ಕೆ ಇಳಿದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬೀದರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಎನ್. ಜಾಬಶೆಟ್ಟಿ ದೂರು ಸಲ್ಲಿಸಿದ್ದಾರೆ.
ಬಸವಕಲ್ಯಾಣ ಶಾಸಕ ಶರಣು ಸಲಗರ ಅವರ ಪತ್ನಿಯೂ ಆಗಿರುವ ಸಾವಿತ್ರಿ ಸಲಗರ ಅವರು ತಹಶೀಲ್ದಾರರಾಗಿ ತಮ್ಮ ಕರ್ತವ್ಯ ನಿಭಾಯಿಸುವುದನ್ನು ಬಿಟ್ಟು, ಪರಿಷತ್ ಚುನಾವಣೆಯಲ್ಲಿ ಗ್ರಾ.ಪಂ, ಪ.ಪಂ. ಹಾಗೂ ಪುರಸಭೆ, ನಗರಸಭೆಗಳ ಸದಸ್ಯರಿಗೆ ಬಿಜೆಪಿಗೆ ಮತ ಹಾಕುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿ, ತಹಶಿಲ್ದಾರರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಇಲ್ಲದಿದ್ದರೆ ಬೀದರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ