ಬೀದರ – ಈಶ್ವರಪ್ಪ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಕಾಯ್ದೆ ಅಡಿಯಲ್ಲಿ ಪ್ರಕರಣವಾಗಿದೆ.ಆದರೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದರು.
ರಾಜ್ಯದಲ್ಲಿ ಬಿಜೆಪಿ ಬ್ರಹ್ಮಾಂಡ ಬ್ರಷ್ಟಾಚಾರ ಮಾಡಿದೆ ಎಂಬುದಕ್ಕೆ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣವೇ ಸಾಕ್ಷಿ.ಕಾಮಗಾರಿಯ ಹಣ ಬಿಡುಗಡೆ ಮಾಡಲು ಈಶ್ವರಪ್ಪ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದಾರೆ ಆದರೂ ಒಂದು ವರ್ಷವಾದರೂ ತನಿಖೆ ಇಲ್ಲ, ಕ್ರಮವನ್ನೂ ಇದೆಲ್ಲ ಏನು ತೋರಿಸುತ್ತದೆ ಎಂದು ಕೇಳಿದರು.
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ರ್ಯಾಲಿಯಲ್ಲಿ ಖಂಡ್ರೆ ಮಾತನಾಡಿದರು.
ವಾಟ್ಸ್ ಆಪ್ ಸಂದೇಶದಲ್ಲಿ ನನ್ನ ಆತ್ಮಹತ್ಯೆಗೆ ನೇರ ಹೊಣೆ ಕೆ.ಎಸ್ ಈಶ್ವರಪ್ಪ ಅಂಥಾ ಪಾಟೀಲ ಹೇಳಿದ್ದಾನೆ. ಆದರೆ ಭ್ರಷ್ಟ ಸರ್ಕಾರ ಈಶ್ವರಪ್ಪಗೆ ರಕ್ಷಣೆ ಕೊಡುತ್ತಿದೆ ಬಹಳ ಒತ್ತಡದ ನಂತರ ಇಂದು ಅವರ ಮೇಲೆ ಪ್ರಕರಣ ದಾಖಲಾಗಿದೆ. ಉದ್ದೇಶ ಪೂರ್ವಕವಾಗಿ, ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಹೊರಗೆ ಬರಬಾರದು ಎಂಬ ಉದ್ದೇಶದಿಂದ ಇವರನ್ನು ರಕ್ಷಣೆ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಗುತ್ತಿಗೆದಾರ ಸಂತೋಷ ಆತ್ಮಹತ್ಯೆಗೆ ಕಾರಣವಾದ ಈಶ್ವರಪ್ಪ ಸೇರಿದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಇವರಿಗೆ ಶಿಕ್ಷೆಯಾಗಿ ಸಂತೋಷಗೆ ನ್ಯಾಯ ಸಿಗಬೇಕು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದರೆ ಹಾಲಿ ಹೈಕೋರ್ಟ್ ನ ನ್ಯಾಯಮೂರ್ತಿಗಳ ನಿಗಾದಲ್ಲಿ ತನಿಖೆಯಾಗಬೇಕು ಎಂದು ಅವರು ಹೇಳಿದರು.
ಸಂತೋಷ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು. ಜೊತೆಗೆ ಅವರ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಖಂಡ್ರೆ ಒತ್ತಾಯಿಸಿದರು.
ವರದಿ: ನಂದಕುಮಾರ ಕರಂಜೆ, ಬೀದರ