ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಇತ್ತೀಚೆಗೆ ಅಳವಡಿಸಿರುವ ಜಾಹೀರಾತು ಪರದೆಯಲ್ಲಿ ಕನ್ನಡ ಭಾಷೆಗೆ ತಿಲಾಂಜಲಿ ನೀಡಿದೆ ಎಂದು ಹಿರಿಯ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ.
ಈ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರಿಗೆ ದೂರು ನೀಡಿರುವ ಅವರು, ಈ ಫಲಕದಲ್ಲಿ ದಿನದ ಇಪ್ಪತ್ನಾಲ್ಕು ಗಂಟೆಯೂ ಮುಕ್ತ ವಿಶ್ವ ವಿದ್ಯಾನಿಲಯ ಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಶಿಕ್ಷಣ ವಿಭಾಗಗಳ ಬಗ್ಗೆ , ವಿ.ವಿ.ಯ ಕಾರ್ಯಕ್ರಮ ಗಳು, ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ನಿರಂತರವಾಗಿ ಆಂಗ್ಲ ಭಾಷೆಯಲ್ಲಿ ಪ್ರಕಟಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಪೈಕಿ ಶೇಕಡಾ ಎಪ್ಪತ್ತರಷ್ಟು ಮಂದಿ ಕರ್ನಾಟಕದವರೇ ಇದ್ದಾರೆ. ಜೊತೆಗೆ ವಿವಿಧ ಉದ್ಯೋಗದಲ್ಲಿರುವ ಹಲವರು ಉದ್ಯೋಗ ಭಡ್ತಿಗಾಗಿ ಹಾಗೂ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಮುಕ್ತ ವಿಶ್ವವಿದ್ಯಾಲಯ ವನ್ನೇ ಅವಲಂಬಿಸಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಸದರಿ ವಿಶ್ವವಿದ್ಯಾಲಯ ವು ತನ್ನ ಪ್ರಚಾರ ಪರದೆಯಲ್ಲಿ ಕನ್ನಡ ಭಾಷೆಯ ಬಗ್ಗೆ ತಾತ್ಸಾರ ತೋರಿಸಿರುವುದು ಖಂಡನೀಯ ಎಂದವರು ಟೀಕಿಸಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೇ ಹೆಸರಾಗಿರುವ ಮೈಸೂರಿನ ಲ್ಲಿ ಸ್ಥಾಪಿತವಾದ ಮುಕ್ತ ವಿಶ್ವವಿದ್ಯಾಲಯ ವು ಕನ್ನಡ ಭಾಷೆಯ ಬಗ್ಗೆ ನಿರ್ಲಕ್ಷ್ಯ ತೋರಿಸಿರುವುದು ಖಂಡನೀಯ ಎಂದು ತಿಳಿಸಿರುವ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೂಡಲೇ ಸೂಕ್ತ ಕ್ರಮಕೈಗೊಂಡು ಮುಕ್ತ ವಿಶ್ವವಿದ್ಯಾನಿಲಯದ ಪ್ರಚಾರ ಪರದೆಯ ಮೇಲೆ ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಒತ್ತಾಯಿಸಿದ್ದಾರೆ