ಮೂಡಲಗಿ: ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವ ಮತ್ತು ಕಾವ್ಯದ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷವು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿಯವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಹೇಳಿದರು.
ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಗುರುವಾರದಂದು ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
೨೪ ಸಾವಿರ ಶ್ಲೋಕಗಳನ್ನು ಒಳಗೊಂಡಿರುವ ರಾಮಾಯಣ ಮಹಾಕಾವ್ಯವು ಭಾರತದ ಚಿತ್ರಕಲೆ, ವಾಸ್ತುಶಿಲ್ಪ, ಸಂಸ್ಕೃತಿ, ಇತಿಹಾಸ, ಪರಂಪರೆ, ಸಂಗೀತ, ನೃತ್ಯ, ರಂಗಭೂಮಿ, ನಾಟಕ, ಯಕ್ಷಗಾನ, ಚಲನಚಿತ್ರ, ಮುಂತಾದ ಕ್ಷೇತ್ರಗಳ ಮೇಲೆ ಅಗಾಧವಾದ ಪ್ರಭಾವವನ್ನು ಬೀರಿದೆ. ಜಗತ್ತಿನ ವಿವಿಧ ರಾಷ್ಟ್ರಗಳ ಮೂಲ ಭಾಷೆಗಳಲ್ಲಿ ಅನುವಾದಗೊಂಡಿರುವ ರಾಮಾಯಣವು ವಿಶ್ವಸಾಹಿತ್ಯ ಮಟ್ಟದ ಮಹಾಕಾವ್ಯವಾಗಿ ಜನಪ್ರಿಯತೆಯನ್ನು ಪಡೆದಿದೆ. ಕಾವ್ಯದ ಕರ್ತೃ ಮಹರ್ಷಿ ವಾಲ್ಮೀಕಿ ವಿಶ್ವಕವಿಯಾಗಿ, ಇತಿಹಾಸಕಾರರಾಗಿ, ಶಾಸ್ತ್ರಜ್ಞರಾಗಿ, ತತ್ವಜ್ಞಾನಿಯಾಗಿ ಗೌರವಿಸಲ್ಪಡುತ್ತಿದ್ದಾರೆ ಎಂದರು.
ಪ್ರೊ. ಡಿ.ಎಸ್. ಹುಗ್ಗಿ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ಮಹಾತಪಸ್ವಿಗಳು, ತಪದಿಂದ ದೈವಶಕ್ತಿಯನ್ನು ಪಡೆದುಕೊಂಡು ಅಗಾಧವಾದ ತಮ್ಮ ಕಾವ್ಯ ಪ್ರತಿಭೆಯಿಂದ ಸೃಷ್ಟಿಸಿರುವ ರಾಮಾಯಣ ಮಹಾಕಾವ್ಯದಲ್ಲಿರುವ ಭಾಷಾಸೃಷ್ಟಿ, ಛಂದಸ್ಸು, ಅಲಂಕಾರ, ಪ್ರಕೃತಿ ಸೌಂದರ್ಯ ಮತ್ತು ಪ್ರಾಣಿಪಕ್ಷಿ, ನದಿ, ಸರೋವರ, ಪರ್ವತ, ಕಾನನಗಳ ವರ್ಣನೆ, ಕಾವ್ಯದಲ್ಲಿನ ರಸಸಂಪತ್ತು, ಮನೋಜ್ಞ ಪಾತ್ರಗಳ ಮೂಲಕ ನಿರೂಪಿಸಿರುವ ಜೀವನ ಮೌಲ್ಯಗಳು ಮತ್ತು ಆದರ್ಶಗಳು, ಕಾವ್ಯದಲ್ಲಿನ ಬಹುವಿಷಯ ಪಾಂಡಿತ್ಯ, ಕಾವ್ಯವಸ್ತುಶ್ರೇಷ್ಠತೆ, ವೈಜ್ಞಾನಿಕ ಪರಿಕಲ್ಪನೆಗಳು ಜಗತ್ತಿನ ಯಾವುದೇ ಕಾವ್ಯದಲ್ಲೂ ಕಂಡುಬರುವುದಿಲ್ಲ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರುಗಳಾದ ಡಾ. ಎಂ.ಬಿ. ಕುಲಮೂರ, ಆರ್. ಎಸ್. ಪಂಡಿತ, ವಿಲಾಸ ಕೆಳಗಡೆ, ಎಸ್.ಎಂ. ಬಂಡಿ, ಸಂತೋಷ ಜೋಡಕುರಳಿ, ಎಂ.ಎನ್. ಮುರಗೋಡ, ಮಲ್ಲಪ್ಪ ಕರಗಣ್ಣಿ, ಬಿ.ಸಿ. ಮಾಳಿ, ಸಾಗರ ಐದಮನಿ, ಗ್ರಂಥಪಾಲಕ ಬಿ.ಬಿ. ವಾಲಿ, ಬಿ.ಕೆ. ಸೊಂಟನವರ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.