ಸಿಂದಗಿ: ವೇಮನ 15ನೆಯ ಶತಮಾನದಲ್ಲಿ ಆಂಧ್ರಪ್ರದೇಶದ ತೆಲುಗಿನ ಶ್ರೇಷ್ಠ ವಚನಕಾರ, ಕವಿ ಸಮಾಜ ಚಿಂತಕರು; ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದರು. ಕನ್ನಡದಲ್ಲಿ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು, ಮಾಹಾಕವಿ ಮಹಾ ಯೋಗಿಯಾಗಿದ್ದಾರೆ. ವೇಮನರ ಕೃತಿಗಳು ಇತಿಹಾಸದಲ್ಲಿ “ವೇಮನ ಶತಕಲು” ಎನ್ನುವರು ಎಂದು ಶಿರಸ್ತೆದಾರ ಸುರೇಶ ಮ್ಯಾಗೇರಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ಮಹಾಯೋಗಿ ಶ್ರೀ ವೇಮನ ಜಯಂತಿಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಕೋವಿಡ್-19 ನಿಯಮಗಳನ್ನು ಅನುಸರಿಸುತ್ತಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಕ ಬಸವರಾಜ ಸೋಂಪುರ ಉಪನ್ಯಾಸ ನೀಡಿ, ವೇಮನ ಹೆತ್ತವರಿಂದ, ಒಡಹುಟ್ಟಿದವರಿಂದ, ಸಂಬಂಧಿಕರಿಂದ ಅನಾದರಕ್ಕೆ ಗುರಿಯಾಗಿ ದುಶ್ಚಟಗಳ ದಾಸನಾಗುತ್ತಾನೆ. ಪರಸ್ತ್ರೀ ಸಂಗದಲ್ಲಿ ವಿಷಯಾಸಕ್ತನಾದ ವೇಮನ ಭೋಗಾಸಕ್ತನಾಗುತ್ತಾನೆ. ವೇಶ್ಯಾಸ್ತ್ರೀಯೊಬ್ಬಳ ಸಹವಾಸ ಮಾಡಿ, ಮನೆಯ ಸಂಪತ್ತನ್ನೆಲ್ಲಾ ಹಾಳುಗೆಡವುತ್ತಾನೆ.
ವೇಮನನಿಗೆ ಅತ್ತಿಗೆಯಾಗಿ ಬಂದ ಹೇಮರೆಡ್ಡಿ ಮಲ್ಲಮ್ಮ ಮೈದುನನ ಮನ ತಿದ್ದುವಲ್ಲಿ ಪ್ರಯತ್ನಿಸಿ ಸಫಲಳಾಗುತ್ತಾಳೆ. ದುಶ್ಚಟಗಳ ದಾಸನಾದ ವೇಮನ ವೇಶ್ಯಾಸ್ತ್ರೀಯೊಬ್ಬಳ ಮನದಾಸೆ ಈಡೇರಿಸಲು, ಅತ್ತಿಗೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಬೇಕೆಂದು ಕೇಳುತ್ತಾನೆ. ಹೇಮರೆಡ್ಡಿ ಮಲ್ಲಮ್ಮ ಮೈದುನನಾದ ವೇಮನನಿಗೆ ಮೂಗುತಿ ಕೊಡಲು ಒಪ್ಪಿ ಕರಾರೊಂದನ್ನು ವಿಧಿಸುತ್ತಾಳೆ.
“ವೇಮನ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಆ ವೇಶ್ಯಾಸ್ತ್ರೀಗೆ ಕೊಡುವಾಗ, ಆಕೆ ನಗ್ನಳಾಗಿ ಬಂದು ವೇಮನ ಕುಳಿತದ್ದ ಮಂಚವನ್ನು ಮೂರು ಸುತ್ತು ಸುತ್ತಬೇಕು. ಮೂರು ಸುತ್ತು ಹಾಕಿದ ನಂತರ ಹಿಂಬದಿಗೆ ಬಾಗಿ, ಎರಡು ಕಾಲುಗಳ ನಡುವೆ ಬಗ್ಗಿ ಕೈ ಚಾಚಿ ವೇಮನನಿಂದ ಮೂಗುತಿಯನ್ನು ಪಡೆಯಬೇಕು.
ಅವಳು ಆ ಮೂಗುತಿಯನ್ನು ಪಡೆಯುವವರೆಗೂ ವೇಮನ ಆಕೆಯ ನಗ್ನದೇಹವನ್ನು ತದೇಕ ಚಿತ್ತನಾಗಿ ನೋಡಬೇಕು”. ವೇಮನ ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮನ ಮಾತನ್ನು ಚಾಚೂ ತಪ್ಪದೆ ಪಾಲಿಸುತ್ತಾನೆ ಆಮೇಲೆ ಪರಿವರ್ತಿತನಾಗುತ್ತಾನೆ ಎನ್ನುವದನ್ನು ಇತಿಹಾಸದಲ್ಲಿ ಕಾಣುತ್ತೇವೆ ಎಂದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲೂಕ ರೆಡ್ಡಿ ಸಮಾಜದ ಅಧ್ಯಕ್ಷ ಸಿ.ಎಮ್. ದೇವರಡ್ಡಿ, ಸಮಾಜದ ಮುಖಂಡರಾಧ ರವಿ ಮಂಗಳೂರ, ಬಸವರಾಜ ಕೊಳೂರ, ಮಲಕನಗೌಡ ಪಾಟೀಲ, ಅನಂತರಡ್ಡಿ ದೇವರೆಡ್ಡಿ, ರಾಜೇಂದ್ರರೆಡ್ಡಿ ದೇಸಾಯಿ ಹಾಗೂ ತಾಲೂಕ ಆಡಳಿತ ಸಿಬ್ಬಂದಿ ವರ್ಗ ಭಾಗವಹಿಸಿರುತ್ತಾರೆ.