ಬೀದರ್ – ನಾವು ಸೋಲ್ತಿವೋ, ಗೆಲ್ತಿವೋ ಏನಾದರೂ ಕೂಡ ನಾವು ಜನಗಳ ಜೊತೆಗೆ ನಿಲ್ಲಬೇಕು. ನಿರಂತರವಾಗಿ ಜನರೊಂದಿಗೆ ಬೆರತು ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಹೇಳಿದರು.
ಬೀದರ್ ನಗರದ ಲಾವಣ್ಯ ಕನ್ವೆನ್ಷನ್ ಹಾಲ್ ನಲ್ಲಿ ಗುರುವಾರ ನಡೆದ, ‘ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ’ಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಮುಖಂಡರು, ಕಾರ್ಯಕರ್ತರು ಜನರೊಂದಿಗೆ ಬೆರೆತು, ಜನರೊಂದಿಗೆ ಇದ್ದು ಕೆಲಸ ಮಾಡಬೇಕು ಎಂದರು.
ಮುಂದಿನ ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆಗಳಲ್ಲಿ ಕೂಡ ಪಕ್ಷದ ಮುಖಂಡರು, ಕಾರ್ಯಕರ್ತರ ಶ್ರಮ ಅಗತ್ಯವಾಗಿರುತ್ತದೆ. ಜನರೊಂದಿಗೆ ಜನತಾದಳ ಎಂಬ ಗುರಿಯೊಂದಿಗೆ ಸಾಗುತ್ತಿರುವ ನಾವು ನಿರಂತರವಾಗಿ ಜನರೊಂದಿಗೆ ಇರುವುದು ಅಗತ್ಯವಾಗಿರುತ್ತದೆ.
ಸದಸ್ಯತ್ವ ನೋಂದಣಿ ಅಭಿಯಾನವನ್ನು ನಾವು ತುಮಕೂರು ಜಿಲ್ಲೆಯಿಂದ ಆರಂಭಿಸಿದ್ದೇವೆ. ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಈಗ ಐದನೇ ಜಿಲ್ಲೆಯಾಗಿ ಬೀದರ್ ನಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಮಾಡ್ತಿದ್ದೇವೆ. ಇನ್ನೂ ಎರಡು ದಿನಗಳ ಕಾಲ ಕಲ್ಯಾಣ ಕರ್ನಾಟಕ ಭಾಗದಲ್ಲೇ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿರುತ್ತೇವೆ. ನಾವು ಜನತಾದಳ ಪಕ್ಷವನ್ನು ಬೇರು ಮಟ್ಟದಿಂದ ಕಟ್ಟಬೇಕಾಗಿದೆ. ನಿಮ್ಮ ಚುನಾವಣೆಗಳಲ್ಲಿ ನೀವು ಗೆಲುವು ಸಾಧಿಸುವುದು ಅಗತ್ಯವಾಗಿರುತ್ತದೆ. ಆಗಾಗಿ ತಾ.ಪಂ, ಜಿ.ಪಂ ಚುನಾವಣೆಗಳ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾವು ಹೆಚ್ಚೆಚ್ಚು ಸ್ಥಾನ ಪಡೆದುಕೊಳ್ಳಬೇಕು ಎಂದರೇ ನಾವೆಲ್ಲರೂ ಶ್ರಮವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿರವರು ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಪಕ್ಷ ಸಂಘಟನೆಯ ಕೆಲಸವನ್ನು ನಿಖಿಲ್ ಕುಮಾರಸ್ವಾಮಿರವರು ಮಾಡ್ತಿದ್ದಾರೆ. ನಮ್ಮ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡ್ತಿದ್ದಾರೆ. ನಾವು ಅವರೊಂದಿಗೆ ಕೈಜೋಡಿಸೋಣ ಎಂದರು.
ನಾವು ರಾಜಕೀಯದಲ್ಲಿ ಜನರ ಹತ್ತಿರ ಇದ್ದು ಸೇವೆ ಮಾಡಿದಾಗ ಜನರೇ ನಮಗೆ ಅಧಿಕಾರ ಕೊಡ್ತಾರೆ. ನಾವು ಜನರೊಂದಿಗೆ ಇರೋಣ. ಗ್ಯಾರಂಟಿ ಮುಖ ತೋರಿಸಿ ಕಾಂಗ್ರೆಸ್ ಸರ್ಕಾರ ಏನ್ ಮಾಡ್ತಿದೆ ಎಂಬುದನ್ನು ಜನ ನೋಡ್ತಿದ್ದಾರೆ. ಅವರ ಗ್ಯಾರಂಟಿಗಳು ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಸಾಗ್ತಿವೆ ಎಂಬುದನ್ನು ಕೂಡ ರಾಜ್ಯದ ಜನರು ನೋಡ್ತಿದ್ದಾರೆ. ಗ್ಯಾರಂಟಿ ಹೆಸರಲ್ಲಿ ರಾಜ್ಯ ಸರ್ಕಾರ ದೋಖಾ ಮಾಡ್ತಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಿದ್ದಾರೆ. ಸರ್ಕಾರ ಬಂದು ಎರಡು ವರ್ಷವಾದ್ರು ಜಿ.ಪಂ, ತಾ.ಪಂ ಚುನಾವಣೆ ಮಾಡುವ ಧೈರ್ಯ ಅವರಿಗೆ ಇಲ್ಲದಾಗಿದೆ ಎಂದು ಬಂಡೆಪ್ಪ ಖಾಶೆಂಪುರ್ ರವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಮಾಜಿ ಶಾಸಕರಾದ ಸುರೇಶ ಗೌಡ, ಮಲ್ಲಿಕಾರ್ಜುನ ಖೂಬಾರವರು ಸೇರಿದಂತೆ ಅನೇಕರು ಮಾತನಾಡಿ, ಜೆಡಿಎಸ್ ಸದಸ್ಯತ್ವ ನೋಂದಣಿ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್, ಮಾಜಿ ಶಾಸಕರಾದ ಸುರೇಶ್ ಗೌಡ, ಮಲ್ಲಿಕಾರ್ಜುನ ಖೂಬಾ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲ್ಪೂರ್, ಪ್ರಮುಖರಾದ ಸೂರ್ಯಕಾಂತ ನಾಗಮಾರಪಳ್ಳಿ, ಉಮಕಾಂತ್ ನಾಗಮಾರಪಳ್ಳಿ, ಬಸವರಾಜ ಪಾಟೀಲ್ ಹಾರೂರಗೇರಿ, ಶಾಂತಲಿಂಗ ಸಾವಳಗಿ, ರಾಜಶೇಖರ ಜವಳೆ, ಅಶೋಕ್ ಕೊಡ್ಗೆ, ರಾಜು ಕಡ್ಯಾಳ, ಸುದರ್ಶನ್ ಸುಂದರರಾಜ, ಸಿದ್ರಾಮಪ್ಪ ವಂಕ್ಕೆ, ಐಲಿಂಜಾನ್ ಮಠಪತಿ, ಬಸವರಾಜ ಪಾಟೀಲ ಹಾರೂರಗೇರಿ, ಮಲ್ಲಿಕಾರ್ಜುನ ನೆಳ್ಗೆ, ರಾಜು ಕಡ್ಯಾಳ, ಅಭಿ ಕಾಳೆ, ಜಾಫೇಡ್ ಕಡ್ಯಾಳ, ಪ್ರಶಾಂತ ವಿಶ್ವಕರ್ಮರವರು ಸೇರಿದಂತೆ ಅನೇಕರಿದ್ದರು.